ನವದೆಹಲಿ: ಡೆಮಾಕ್ರಸಿಯು ‘ನಮೊಕ್ರಸಿ’ ಆಗಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ವಾತಾವರಣ ಇದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಅಧಿಕಾರದಿಂದ ಎನ್ಡಿಎ ದೂರವಿಡುವ ಉದ್ದೇಶದಿಂದ ಎಲ್ಲ ವಿರೋಧ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಒಗ್ಗಟ್ಟಿನ ಹೋರಾಟ ನಡೆಸಲಿವೆ ಎಂದು ಅವರು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷ ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕೋಲ್ಕತ್ತ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಹಾಗೂ ಸಿಬಿಐ ನಡುವಿನ ತಿಕ್ಕಾಟವನ್ನು ಪ್ರಸ್ತಾಪಿಸಿದ ಅವರು, ಇಷ್ಟೊಂದು ಕೆಳಮಟ್ಟಕ್ಕಿಳಿದ ಸರ್ಕಾರವನ್ನು ತಾವು ನೋಡಿಲ್ಲ ಎಂದು ಲೇವಡಿ ಮಾಡಿದರು.
ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಎನ್ಸಿಪಿ ನಾಯಕ ಶರದ್ ಪವಾರ್ ಹಾಗೂ ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಅವರು ರ್ಯಾಲಿಯಲ್ಲಿ ಉಪಸ್ಥಿತರಿದ್ದರು.