ಗುವಾಹಟಿ: ಅಸ್ಸಾಂನ ಪೂರ್ವ ಭಾಗದಲ್ಲಿರುವ ಆಯಿಲ್ ಇಂಡಿಯಾ ಲಿಮಿಟೆಡ್ನ (ಒಐಎಲ್) ನೈಸರ್ಗಿಕ ಅನಿಲ ಬಾವಿಯಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಬಾವಿಯಿಂದ ಕಳೆದ 14 ದಿನಗಳಿಂದ ಅನಿಯಂತ್ರಿತವಾಗಿ ನೈಸರ್ಗಿಕ ಅನಿಲ ಸೋರಿಕೆಯಾಗುತ್ತಿದೆ.
ಟಿನ್ಸುಕಿಯಾ ಜಿಲ್ಲೆಯ ಬಾಗ್ಜನ್ ತೈಲ ಕ್ಷೇತ್ರದ ಅನಿಲ ಬಾವಿಯಲ್ಲಿ ಮೇ 27 ರಿಂದ ಅನಿಲ ಸೋರಿಕೆ ಆಗುತ್ತಿದೆ. ಸೋರಿಕೆಯನ್ನು ನಿಯಂತ್ರಿಸಲು ಸಿಂಗಪುರದ ತಜ್ಞರ ಮತ್ತು ಸ್ಥಳೀಯ ಎಂಜಿನಿಯರ್ಗಳ ತಂಡವು ಪ್ರಯತ್ನದಲ್ಲಿ ತೊಡಗಿದ್ದಾಗಲೇ ಮಂಗಳವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮೈಲಿ ದೂರದವರೆಗೆ ದಟ್ಟವಾಗಿಕಪ್ಪು ಹೊಗೆ ಆವರಿಸಿದೆ. ಸುತ್ತಲಿರುವ ಸ್ಥಳೀಯರು ಬೇರೆಕಡೆಗೆ ಸ್ಥಳಾಂತರವಾಗುತ್ತಿರುವುದು ಕಂಡುಬಂಡಿದ್ದು, ಆಕಾಶದೆತ್ತರಕ್ಕೆ ಬೆಂಕಿ ಜ್ವಾಲೆ ಕಾಣಿಸುತ್ತಿದೆ. ಸ್ಫೋಟದ ಶಬ್ದ ಕೇಳಿ ಬಂದಿದೆ ಎಂದು ನಿವಾಸಿಗಳು ಹೇಳಿದ್ದಾರೆ.
Massive Fire At Oil Well In Assam That Was Leaking Gas For Last 14 Days. Thanks @OilIndiaLimited for burning our future.
— Licypriya Kangujam (@LicypriyaK) June 9, 2020
pic.twitter.com/HtW5ISOp9V
#WATCH Massive fire at the gas well of Oil India Ltd at Baghjan in Tinsukia district, Assam. A team of National Disaster Response Force (NDRF) is present at the spot pic.twitter.com/Tw2G92aPXy
— ANI (@ANI) June 9, 2020
ಅನಿಲ ಪೂರೈಕೆ ಮಾರ್ಗದ ಜೋಡಣೆ ಕೆಲಸವು ಅಂತಿಮ ಹಂತ ತಲುಪಿದೆ ಎಂದು ಒಐಎಲ್ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎನ್ಡಿಆರ್ಎಫ್ ಮತ್ತು ಇತರೆ ರಕ್ಷಣಾ ಸಂಸ್ಥೆಗಳ ಸೇವೆಗೆ ಒತ್ತಾಯಿಸಲಾಗಿದ್ದು, ಮಧ್ಯಾಹ್ನ 3ರ ವರೆಗೆ ಬೆಂಕಿ ನಿಯಂತ್ರಣಕ್ಕೆ ಬಂದಿರಲಿಲ್ಲ.
ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್ ಅವರು ಕೇಂದ್ರದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಈ ಕುರಿತು ಚರ್ಚಿಸಿದ್ದು, ಬೆಂಕಿ ನಿಯಂತ್ರಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಹಾಗೂ ಸ್ಥಳೀಯರ ಸುರಕ್ಷತೆಗೂ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿದ್ದಾರೆ.
ತೈಲ ಬಾವಿಯ ಸಮೀಪದ ಭತ್ತದ ಗದ್ದೆಗಳು, ಕೊಳಗಳು ಕಲುಷಿತಗೊಂಡಿವೆ. ಚಹಾ ತೋಟಗಳಲ್ಲಿ ಸಹ ಅನಿಲದ ಕಣಗಳು ವ್ಯಾಪಿಸಿವೆ ಎಂದು ಬೆಳೆಗಾರರು ದೂರಿದ್ದಾರೆ. ಈ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ.
ಘಟನಾ ಸ್ಥಳದ 1.5 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ಕನಿಷ್ಠ 6,000 ಜನರನ್ನು ಸ್ಥಳಾಂತರಿಸಿ ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ. ಸಂತ್ರಸ್ತ ಕುಟುಂಬಗಳಿಗೆ ತಲಾ ₹30,000 ಪರಿಹಾರವನ್ನು ಒಐಎಲ್ ಘೋಷಿಸಿದೆ ಎಂದು ಎನ್ಡಿಟಿವಿ ವರದಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.