ಲಖನೌ:ಕೇಂದ್ರ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಹಿಂದಿನ ಕಾಂಗ್ರೆಸ್ ಸರ್ಕಾರದ ಹಾದಿಯನ್ನೇ ಅನುಸರಿಸುತ್ತಿವೆ ಎಂದು ಬಿಎಸ್ಪಿ(ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪಿಸಿದರು.
64ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಬುಧವಾರ ಬೆಳಿಗ್ಗೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ಹಾದಿಯನ್ನೇ ಅನುಸರಿಸುತ್ತಿದೆ. ರಾಜಕೀಯ ಲಾಭಕ್ಕಾಗಿ ಅಧಿಕಾರ ದುರ್ಬಳಕೆ ಮಾಡುತ್ತಿದೆ. ಸರ್ಕಾರದ ತಪ್ಪು ನೀತಿಗಳು ದೇಶದಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡಿದೆ. ಕಾಂಗ್ರೆಸ್ ಕೂಡ ಇಂತಹದ್ದೇ ತಪ್ಪುಗಳನ್ನು ಮಾಡಿತ್ತು. ಅದಕ್ಕಾಗಿ ಜನ ಕಾಂಗ್ರೆಸ್ಸನ್ನು ತಿರಸ್ಕರಿಸಿದ್ದರು’ ಎಂದು ಮಾಯಾವತಿ ಹೇಳಿದರು.
‘ದೇಶವು ನಿರುದ್ಯೋಗ, ಹಣದುಬ್ಬರದಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿ ಎನ್ಆರ್ಸಿ ಮತ್ತು ಎನ್ಪಿಆರ್ ಅನುಷ್ಠಾನಕ್ಕೆ ಸಂಬಂಧಿಸಿ ಬಿಜೆಪಿ ಮೊಂಡುತನ ಪ್ರದರ್ಶಿಸಬಾರದು’ ಎಂದು ಅವರು ಹೇಳಿದರು. ಅಲ್ಲದೆ, ಮೋದಿ ಸರ್ಕಾರವು ಬಂಡವಾಳಶಾಹಿಗಳ ಪರವಾಗಿದೆ ಎಂದು ದೂರಿದರು.
‘ಕೇಂದ್ರದ ಬಿಜೆಪಿ ಸರ್ಕಾರವು ಬಡವರ ವಿರುದ್ಧ ಕೆಲಸ ಮಾಡುತ್ತಿದೆ. ಬಡತನ ಮತ್ತು ಉದ್ವಿಗ್ನತೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ’ ಎಂದು ಅವರು ಟೀಕಿಸಿದರು.