ಶಿಲ್ಲಾಂಗ್: ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ 37 ವರ್ಷದ ವ್ಯಕ್ತಿಯೊಬ್ಬರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ.
ಇದರಿಂದಾಗಿ ಬುಡಕಟ್ಟು ಹಾಗೂ ಬುಡಕಟ್ಟೇತರ ಜನರ ಗುಂಪುಗಳ ನಡುವೆ ಶುಕ್ರವಾರದಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.
‘ಶೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದ್ದು, ಮೃತವ್ಯಕ್ತಿಯನ್ನು ಉಫಾಸ್ ಉದ್ದಿನ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಜಿಲ್ಲೆಯಲ್ಲಿ ಪರಿಸ್ಥಿತಿ ಬಿಗುವಾಗಿದೆ. ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದ್ದು, ಜನರ ಜೀವ ಮತ್ತು ಸ್ವತ್ತುಗಳಿಗೆ ಹಾನಿ ಉಂಟಾಗಬಹುದು. ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8ರಿಂದ ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.
ಸಿಎಎ ವಿರೋಧಿಸಿ ಹಾಗೂ ಇನ್ನರ್ಲೈನ್ ಪರ್ಮಿಟ್ (ಐಎಲ್ಪಿ) ಜಾರಿಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ಆಯೋಜಿಸಲಾಗಿದ್ದ ರ್ಯಾಲಿ ವೇಳೆ ಖಾಸಿ ವಿದ್ಯಾರ್ಥಿ ಒಕ್ಕೂಟ (ಕೆಎಸ್ಯು) ಸದಸ್ಯರು ಹಾಗೂ ಬುಡಕಟ್ಟೇತರ ಜನರ ನಡುವೆ ಸಂಘರ್ಷ ಉಂಟಾಗಿ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.