ಬೆಂಗಳೂರು: ‘ಮೇಕೆದಾಟು ಯೋಜನೆಯ ರೂಪುರೇಷೆಗಳು ಹೇಗಿರುತ್ತವೆ ಎಂಬುದನ್ನು ತಮಿಳುನಾಡು ರೈತರೊಂದಿಗೆ ಹಂಚಿಕೊಳ್ಳಲು ಸಿದ್ಧರಿದ್ದೇವೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಜಲಸಂಪನ್ಮೂಲ ಸಚಿವರ ನೇತೃತ್ವದಲ್ಲೇ ಸಭೆ ಕರೆಯಲಿ. ತಮಿಳುನಾಡು ಸರ್ಕಾರದೊಂದಿಗೆ ಮಾತನಾಡಲೂ ಸಿದ್ಧರಿದ್ದೇವೆ’ ಎಂದರು.
‘ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ಗೆ ಹೋಗಿರುವ ಮಾಹಿತಿ ಇದೆ. ಕುಡಿಯುವ ನೀರಿನ ಸಲುವಾಗಿ ಈ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚಿನ ಅನುಕೂಲವಾಗುತ್ತದೆ’ ಎಂದು ಪ್ರತಿಪಾದಿಸಿದರು.
‘ಡಿಸೆಂಬರ್ 6ರಂದು ಮಾಜಿ ಮುಖ್ಯಮಂತ್ರಿಗಳ ಸಭೆ ಕರೆಯಲಾಗಿದೆ. ಆ ಸಭೆಯಲ್ಲೂ ಮೇಕೆದಾಟು ಯೋಜನೆ ಬಗ್ಗೆ ವಿಸ್ತೃತ ಚರ್ಚೆ ನಡೆಸುತ್ತೇವೆ’ ಎಂದು ಅವರು ತಿಳಿಸಿದರು.