ತಿಪ್ಪಸಂದ್ರ(ಮಾಗಡಿ): ವಿದ್ಯಾರ್ಥಿಗಳಿಗೆ ವಿಧಾನಸಭೆ ಮತ್ತು ಲೋಕಸಭೆ ರಚನೆ ಬಗ್ಗೆ ತಿಳಿಸುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಹೆಚ್ಚಿನ ಒತ್ತುನೀಡಬೇಕಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದಗಂಗಯ್ಯ ತಿಳಿಸಿದರು.
ಸರ್ಕಾರಿ ಮಾರುತಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮತ್ತು ಅಣುಕು ಸಂಸತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹನೀಯರು ಕಟ್ಟಿಬೆಳೆಸಿರುವ ಪ್ರಜಾಪ್ರಭುತ್ವದ ಮೌಲ್ಯ ಇಂದು ಅಪಹಾಸ್ಯಕ್ಕೆ ಈಡಾಗುತ್ತಿದೆ. ಸಂವಿಧಾನದ ಮೌಲ್ಯಗಳನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು, ಪ್ರಜಾರಾಜ್ಯದ ಆಶಯ ಎಲ್ಲರಿಗೂ ತಲುಪುವಂತೆ ನೋಡಿಕೊಳ್ಳುವ ಗುರುತರ ಹೊಣೆಗಾರಿಕೆ ಶಿಕ್ಷಕ ಸಮುದಾಯದ ಮೇಲಿದೆ ಎಂದು ತಿಳಿಸಿದರು.
ಮುಖ್ಯಶಿಕ್ಷಕ ಸುರೇಶ್ ಎಂ.ಎಸ್.ಮಾತನಾಡಿ, ಬ್ರಿಟಿಷರ ದಬ್ಬಾಳಿಕೆ, ದೌರ್ಜನ್ಯದ ವಿರುದ್ಧ ಹೋರಾಡಿ ಸ್ವಾತಂತ್ರ್ಯತಂದು ಕೊಟ್ಟು ದೇಶಪ್ರೇಮಿಗಳ ಶ್ರಮವನ್ನು ಯುವಜನರು ಅರ್ಥ ಮಾಡಿಕೊಳ್ಳಬೇಕಿದೆ. ದೇಶ ಮೊದಲು, ದೇಹ ನಂತರ ಎಂಬ ಧ್ಯೇಯವಾಕ್ಯ ನಮ್ಮೆಲ್ಲರದ್ದೂ ಆಗಬೇಕಿದೆ ಎಂದು ಆಶಿಸಿದರು.
ಜನತಾ ಸಭೆಗಳಾದ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಬೇಕಿದೆ. ಜನಪ್ರತಿನಿಧಿಗಳು ಕಡ್ಡಾಯವಾಗಿ ಅಧಿವೇಶನಗಳಲ್ಲಿ ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಬೇಕು ಎಂದು ಹೇಳಿದರು.