ಮುಂಬೈ: ನವದೆಹಲಿಯ ನಿಜಾಮುದ್ದೀನ್ನಲ್ಲಿ ಕಳೆದ ತಿಂಗಳು ತಬ್ಲಿಗಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ 150 ಜನರ ವಿರುದ್ಧ, ‘ಕೊರೊನಾ ಸೋಂಕು ಹರಡಿರುವ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ’ ಆರೋಪದಡಿ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ‘ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ದೂರು ನೀಡಿತ್ತು. ಈ ದೂರನ್ನು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
’ಭಾರತೀಯ ದಂಡಸಂಹಿತೆಯ (ಐಪಿಸಿ) 269ನೇ ಸೆಕ್ಷನ್ (ಉದ್ದೇಶಪೂರ್ವಕವಾಗಿ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯ ಉಂಟುಮಾಡುವಂತಹ ಸೋಂಕು ಹರಡುವ ಕೃತ್ಯ ಎಸಗುವುದು) ಹಾಗೂ 271ನೇ ಸೆಕ್ಷನ್ (ಕ್ವಾರಂಟೈನ್ ನಿಯಮ ಉಲ್ಲಂಘಿಸುವುದು) ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.