ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌ಗೆ ಬಡವ, ಶ್ರೀಮಂತ ಎಂಬುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ವದಂತಿಗಳಿಗೆ ಕಿವಿಕೊಡದೆ ಮನೆಯಲ್ಲೇ ಇರಲು ಮನವಿ
Last Updated 25 ಮಾರ್ಚ್ 2020, 12:50 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ (ಕೋವಿಡ್–19) ಬಡವ, ಶ್ರೀಮಂತ ಎಂದು ತಾರತಮ್ಯ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ 21 ದಿನ ಲಾಕ್‌ಡೌನ್ ಘೋಷಿಸಿದ ಮರುದಿನ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ಜನತೆ ಜತೆ ಅವರು ವಿಡಿಯೊ ಕಾನ್ಫರೆನ್ಸ್‌ ನಡೆಸಿ ಮಾತನಾಡಿದರು.

‘ಕೆಲವು ಸಂದರ್ಭಗಳಲ್ಲಿ ಜನರು ಮಹತ್ವದ ಸಂಗತಿಗಳ ಬಗ್ಗೆ ಅಷ್ಟಾಗಿ ಗಮನಹರಿಸುವುದಿಲ್ಲ. ಇದುವೇ ಈಗ ಭಾರತದಲ್ಲಿ ಆಗುತ್ತಿರುವುದು. ವದಂತಿಗಳಿಗೆ ಕಿವಿಕೊಡಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್–19 ವೈರಸ್ ಬಡವ, ಶ್ರೀಮಂತ ಎಂದು ತಾರತಮ್ಯ ಮಾಡುವುದಿಲ್ಲ. ಯೋಗ ಮಾಡುತ್ತಾರೆ, ಪ್ರತಿದಿನ ವ್ಯಾಯಾಮ ಮಾಡುತ್ತಾರೆ ಎಂಬ ಕಾರಣಕ್ಕೆ ಅಂತಹವರನ್ನು ವೈರಸ್ ಬಿಟ್ಟುಬಿಡುವುದಿಲ್ಲ’ ಎಂದು ಮೋದಿ ಹೇಳಿದರು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಶಿಯವರು ದೇಶದ ಜನರಿಗೆ ತಾಳ್ಮೆ, ಸಹಾನುಭೂತಿ ಮತ್ತು ಶಾಂತಿಯ ಪಾಠ ಹೇಳುವ ಮೂಲಕ ದಾರಿ ತೋರಬೇಕು ಎಂದು ಮೋದಿ ಹೇಳಿದರು.

‘ವಾರಾಣಸಿಯ ಸಂಸದನಾಗಿ ನಾನು ಇಂತಹ ಸಂದರ್ಭದಲ್ಲಿ ನಿಮ್ಮ ಜತೆಗಿರಬೇಕಿತ್ತು. ಆದರೆ, ದೆಹಲಿಯಲ್ಲಿನ ಬೆಳವಣಿಗೆಗಳ ಬಗ್ಗೆ ನಿಮಗೆ ತಿಳಿದೇ ಇದೆ. ಇಲ್ಲಿ ವ್ಯಸ್ತನಾಗಿರುವುದರ ನಡುವೆಯೂ ವಾರಾಣಸಿಯ ನನ್ನ ಸಹೋದ್ಯೋಗಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ’ ಎಂದು ಮೋದಿ ಹೇಳಿದರು.

ಕೊರೊನಾ ಹರಡುವಿಕೆ ತಡೆಯಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಅವರು ವಿವರಣೆ ನೀಡಿದರು. ಇದಕ್ಕೂ ಮುನ್ನ ನಡೆಸಿದ್ದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ನಡುವೆ ಅಂತರ ಕಾಯ್ದುಕೊಳ್ಳುವ ಮೂಲಕ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ (ಸೋಷಿಯಲ್ ಡಿಸ್ಟೆನ್ಸಿಂಗ್) ಸಂದೇಶ ಸಾರಿದ್ದರು.

ಮಂಗಳವಾರ ರಾತ್ರಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ 21 ದಿನ ದೇಶದಾದ್ಯಂತ ಲಾಕ್‌ಡೌನ್‌ಗೆ ಕರೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT