ನವದೆಹಲಿ: ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಅಗೌರವ ತೋರಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿರುವ ಕಾರಣ, ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಪರಿಷ್ಕರಿಸುವುದಾಗಿ ಕೇಂದ್ರ ಸರ್ಕಾರ ಭಾನುವಾರ ಹೇಳಿದೆ.
ಪರಿಷ್ಕೃತ ಮಾರ್ಗಸೂಚಿಯಿಂದಾಗಿ ಅಂತ್ಯಸಂಸ್ಕಾರ ವಿಳಂಬವಾಗುವುದು ತಪ್ಪಲಿದೆ ಎಂದೂ ತಿಳಿಸಿದೆ.
ಸ್ಕೌಟ್ಸ್ ಮತ್ತು ಗೈಡ್ಸ್, ಎನ್ಸಿಸಿ ಕೆಡೆಟ್ ಹಾಗೂ ಸರ್ಕಾರೇತರ ಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಆರೋಗ್ಯ ಸೇವೆಗಳಿಗೆ ಬಳಸಿಕೊಳ್ಳಲು ಕೂಡ ಸರ್ಕಾರ ನಿರ್ಧರಿಸಿದೆ.
ದೆಹಲಿಯ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲು ಹಮ್ಮಿಕೊಂಡಿದ್ದ ಸಭೆಯ ಬಳಿಕ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
‘ಭಾರತವು ಕೋವಿಡ್–19 ವಿರುದ್ಧ ಶಕ್ತಿ ಮೀರಿ ಹೋರಾಡುತ್ತಿದೆ. ಈ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳ ಭಾವನೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ಮೃತರ ಅಂತ್ಯಸಂಸ್ಕಾರಕ್ಕೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲು ನಿರ್ಧರಿಸಲಾಗಿದೆ’ ಎಂದು ಶಾ ಅವರು ಟ್ವೀಟ್ ಮಾಡಿದ್ದಾರೆ.
ಕೋವಿಡ್ ರೋಗಿಗಳನ್ನು ಪ್ರಾಣಿಗಿಂತಲೂ ಕೀಳಾಗಿ ನೋಡಲಾಗುತ್ತಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿತ್ತು.