ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಛತ್ತೀಸಗಡ ರಾಜ್ಯದಲ್ಲಿ ಕಾಂಗ್ರೆಸ್ ಜತೆ ಚುನಾವಣಾ ಪೂರ್ವ ಮೈತ್ರಿಯಿಂದ ಹಿಂದೆ ಸರಿದ ಬಳಿಕ, ಇದೀಗ ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲೂ ಏಕಾಂಗಿ ಹೋರಾಟ ನಡೆಸಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಛತ್ತೀಸಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳ ಕೆಲವು ವಿಧಾನಸಭಾ ಕ್ಷೇತ್ರಗಳ ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿದ ಬಳಿಕ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಅವರ ಅಪ್ತ ಮೂಲಗಳು ತಿಳಿಸಿವೆ.
ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಜತೆ ಚುನಾವಣಾ ಪೂರ್ವ ಮೈತ್ರಿ ಅಸಾಧ್ಯ ಎಂದು ಅವರು ಹೇಳಿರುವುದಾಗಿ ತಿಳಿದುಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮಧ್ಯಪ್ರದೇಶದಲ್ಲಿ ಈಗಾಗಲೇ 22 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಮತ್ತೆ 40 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು.ಆಕ್ಟೋಬರ್ ತಿಂಗಳ ಮೊದಲ ವಾರದಲ್ಲಿ 168 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ಮಧ್ಯಪ್ರದೇಶ ಬಿಎಸ್ಪಿ ಮುಖಂಡ ರಾಮಾಚಲ ರಾಜ್ಬಾರ್ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಮಾಯಾವತಿ ಉಚ್ಚಾಟಿಸಿರುವ ದಲಿತ ನಾಯಕ ದೇವಶೀಸ್ ಜರಾರಿಯ ಅವರು ಪಕ್ಷಕ್ಕೆ ಸೇರುವುದಾದರೆ ಸ್ವಾಗತ ಎಂದು ಹೇಳಿದೆ.
ರಾಜಸ್ಥಾನದಲ್ಲೂ ಕಾಂಗ್ರೆಸ್ ಮೈತ್ರಿಯಿಂದ ದೂರ ಉಳಿದು ಏಕಾಂಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ.