ನವದೆಹಲಿ: ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲುವ್ಯಕ್ತಿಗೆ ನೀಡಲಾಗುವನಿರೀಕ್ಷಣಾ ಜಾಮೀನಿಗೆ ಯಾವುದೇ ರೀತಿಯ ಸಮಯ ನಿಗದಿ ಮಾಡಲು ಸಾಧ್ಯವಿಲ್ಲ ಎಂಬ ಮಹತ್ವದ ತೀರ್ಪನ್ನು ಬುಧವಾರ ಸುಪ್ರೀಂಕೋರ್ಟ್ ನೀಡಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಇಂದಿರಾ ಬ್ಯಾನರ್ಜಿ, ವಿನೀತ್ ಸರಣ್, ಎಂಆರ್ ಶಾ ಮತ್ತು ರವೀಂದ್ರ ಭಟ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದ್ದು, ನಿರೀಕ್ಷಣಾ ಜಾಮೀನಿಗೆ ನಿಗದಿತ ಸಮಯ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಮೇ 15, 2018ರಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕುರಿಯನ್ ಜೋಸೆಫ್, ಮೋಹನ್ ಎಂ ಶಾಂತನಗೌಡರ್, ನವೀನ್ ಸಿನ್ಹಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅಪರಾಧ ದಂಡ ಸಂಹಿತೆ ಸೆಕ್ಷನ್ 438ರ ಅನ್ವಯ ವ್ಯಕ್ತಿಯು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯುವವರೆಗೆ ನೀಡುವ ನಿರೀಕ್ಷಣಾ ಜಾಮೀನಿಗೆ ಸಮಯ ನಿಗದಿ ಮಾಡಬೇಕೆ ಅಥವಾ ಬೇಡವೆ ಎಂಬ ತೀರ್ಮಾನವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.
1973ರ ಅಪರಾಧ ದಂಡ ಸಂಹಿತೆ ಸೆಕ್ಷನ್ 438ರಲ್ಲಿ ವ್ಯಕ್ತಿಯೊಬ್ಬರಿಗೆ ಬಂಧನ ಭೀತಿಯಿಂದ ತಪ್ಪಿಸಲು ಜಾಮೀನು ನೀಡುವುದರ ಕುರಿತು ಹೇಳಲಾಗಿದೆ. ಬಂಧನಪೂರ್ವ ನೀಡಲಾಗುವ ಜಾಮೀನಿಗೆ ಷರತ್ತುಗಳನ್ನು ವಿಧಿಸಬಹುದು ಆದರೆ, ನಿರೀಕ್ಷಣಾ ಜಾಮೀನಿಗೆ ಸಮಯ ನಿಗದಿ ಮಾಡಲು ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಮೇಲಿನ ತೀರ್ಪಿನಿಂದಾಗಿ ನಿರೀಕ್ಷಣಾ ಜಾಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಹೊಂದಿದ್ದ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.