ಚಂಡಿಗಡ: ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಮಳೆ ಸ್ಥಗಿತಗೊಂಡಿದ್ದರೂ, ನದಿಗಳು ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಪ್ರವಾಹಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಆದರೆ ಲುಧಿಯಾನ, ರೂಪ್ನಗರ್ ಹಾಗೂ ಜಲಂಧರ್ನ ಅನೇಕ ಗ್ರಾಮಗಳು ಇನ್ನೂ ಜಲಾವೃತವಾಗಿ ಇವೆ. ಈ ಗ್ರಾಮಗಳ ಜನರಿಗೆ ತಾತ್ಕಾಲಿಕ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಹರಿಯಾಣ ಮತ್ತು ಪಂಜಾಬ್ನಲ್ಲಿ ಮಂಗಳವಾರ ಮಳೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದು ಶವ ಪತ್ತೆ:ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಹಾನಿಗೊಳಗಾಗಿರುವ ಉತ್ತರಕಾಶಿ ಜಿಲ್ಲೆಯಲ್ಲಿ ಮಂಗಳವಾರ ಇನ್ನೊಂದು ಶವ ಪತ್ತೆಯಾಗಿದೆ. ಇಲ್ಲಿ ಮಳೆಯಿಂದಾಗಿ ಸತ್ತವರ ಸಂಖ್ಯೆ 13ಕ್ಕೆ ಏರಿದಂತಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರಸಿಂಗ್ ರಾವತ್ ಅವರು ಮಂಗಳವಾರ ಜಿಲ್ಲೆಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.
ಪರಿಹಾರ ಕೇಂದ್ರದಲ್ಲಿರುವವರಿಗೆ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಆಹಾರ ಹಾಗೂ ಇತರ ಅಗತ್ಯ ಸಾಮಗ್ರಿಯನ್ನು ತಲುಪಿಸಲಾಗಿದೆ.
ಇದನ್ನೂ ಓದಿ:ಹಿಮಾಚಲ ಪ್ರದೇಶ: ಭಾರಿ ಮಳೆಗೆ 22 ಸಾವು
ತಗ್ಗದ ಯಮುನಾ ಪ್ರವಾಹ:ಯಮುನಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆಯಾಗದ ಕಾರಣ ನವದೆಹಲಿಯ ಅನೇಕ ಪ್ರದೇಶಗಳಲ್ಲಿ ಪ್ರವಾಹ ಭೀತಿ ಮುಂದುವರಿದಿದೆ.
ತಗ್ಗು ಪ್ರದೇಶದಲ್ಲಿ ನೆಲೆಸುತ್ತಿದ್ದ 10 ಸಾವಿರಕ್ಕೂ ಹೆಚ್ಚು ಜನರನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇವರಿಗಾಗಿ 22ಸಾವಿರ ಟೆಂಟ್ಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಉತ್ತರಕ್ಕೆ ವಿಸ್ತರಿಸಿದ ಮಳೆಯ ಆರ್ಭಟ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.