ಮುಂಬೈ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳನ್ನು ಮೇ 31ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಬಂಧಿತ ಹಿರಿಯ ವಿದ್ಯಾರ್ಥಿನಿಯರು ಜಾತಿ ನಿಂದನೆ ಮಾಡಿದ್ದರು ಎಂದು ಮನನೊಂದು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಪಾಯಲ್ ತಡ್ವಿ (26) ಅವರು ಮೇ 22 ರಂದುರಾಜ್ಯ ಸರ್ಕಾರದ ಬಿ.ವೈ.ಎಲ್. ನಾಯರ್ ಆಸ್ಪತ್ರೆಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬಂಧನಕ್ಕೊಳಗಾಗಿರುವ ಡಾ. ಹೇಮಾ ಅಹುಜಾ, ಡಾ. ಭಕ್ತಿ ಮೆಹರ್ ಮತ್ತು ಡಾ. ಅಂಕಿತಾ ಖಂಡೇಲ್ವಾಲ್ ಅವರ ವಿರುದ್ಧ ಜಾತಿ ನಿಂದನೆ, ಕಿರುಕುಳ ಮತ್ತು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಎಂ.ಸದ್ರಾನಿ ಅವರು, ಮೂರು ಆರೋಪಿಗಳನ್ನು ಬುಧವಾರ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.