ನವದೆಹಲಿ: ದೇಶದಲ್ಲಿ 6 ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ ಸಾಮಾನ್ಯವಾದ ಪಠ್ಯಕ್ರಮ ಇರುವ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಕೇಂದ್ರಕ್ಕೆ ಸೂಚನೆ ನೀಡುವಂತೆ ಕೋರಿ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.
‘ಸಿಬಿಎಸ್ಇ ಹಾಗೂ ಐಸಿಎಸ್ಇಗಳನ್ನು ವಿಲೀನಗೊಳಿಸಿ, ಒಂದು ದೇಶ ಒಂದು ಶಿಕ್ಷಣ ಮಂಡಳಿ ಸ್ಥಾಪಿಸುವ ಕಾರ್ಯ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ’ ಅವರು ಅರ್ಜಿಯಲ್ಲಿ ಕೋರಿದ್ದಾರೆ.
ಸಂವಿಧಾನದ 21ಎ ವಿಧಿ (ಉಚಿತ ಹಾಗೂ ಕಡ್ಡಾಯ ಶಿಕ್ಷಣ) ಆಶಯದಂತೆ ಸಾಮಾನ್ಯ ಪಠ್ಯಕ್ರಮ ಹಾಗೂ ಏಕರೂಪ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಂಡಿಲ್ಲ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.