ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಒಬ್ಬ ಗುಮಾಸ್ತನಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಈ ಮಾತನ್ನು ನಾನು ಹೇಳುತ್ತಿಲ್ಲ. ಕಾಂಗ್ರೆಸ್ ತನ್ನನ್ನು ಗುಮಾಸ್ತನ ರೀತಿ ನಡೆಸಿಕೊಳ್ಳುತ್ತಿದೆ ಎಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ’ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಭಿನ್ನಾಭಿಪ್ರಾಯ ಹೊಗೆಯಾಡುತ್ತಿದೆ ಎಂದು ಅವರು ಶನಿವಾರ ಬಿಜೆಪಿ ರಾಷ್ಟ್ರೀಯ ಮಂಡಳಿ ಸಮಾವೇಶದಲ್ಲಿ ಸುಳಿವು ನೀಡಿದರು.
ತಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಮಿತ್ರಪಕ್ಷಗಳು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಗಳನ್ನು ಬೆದರಿಸುತ್ತಿವೆ. ಇಲ್ಲವಾದರೆ ಪರಿಣಾಮ ಎದುರಿಸಲು ಸಿದ್ಧವಾಗಿ ಎಂದು ಈಗಾಗಲೇ ಎಚ್ಚರಿಕೆ ನೀಡಿವೆ ಎಂದು ಮೋದಿ ಹೇಳಿದರು.
**
ಅನುಕೂಲಕ್ಕೆ ತಕ್ಕಂತೆ ಮೋದಿ ವ್ಯಾಖ್ಯಾನ ಮಾಡಿದ್ದಾರೆ. ಅವ<br/>ರಿಂದ ಬೇರೆ ಇನ್ಯಾವ ಪ್ರತಿಕ್ರಿಯೆ ಸಾಧ್ಯ.<br/>ನಾವು ಹಿಂದೆ ಬಿಜೆಪಿ ಜೊತೆ ಹೋಗಿದ್ದಾಗಲೂ ಕಹಿ ಅನುಭವ ಆಗಿತ್ತು.
-ಎಚ್.ಡಿ. ದೇವೇಗೌಡ, ಜೆಡಿಎಸ್ ವರಿಷ್ಠ
**
ಬಿಜೆಪಿಯಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲ. ಇಂಥವರ ಸಲಹೆಯನ್ನು ನಾವು ತೆಗೆದು<br/>ಕೊಳ್ಳುತ್ತೇವಾ. ಅವರ ಪಕ್ಷದವರೇ ಮೋದಿ ಮಾತು ಕೇಳುವುದಿಲ್ಲ.
-ಮಲ್ಲಿಕಾರ್ಜುನ ಖರ್ಗೆ , ಲೋಕಸಭೆ ಕಾಂಗ್ರೆಸ್ ನಾಯಕ
**
ನರೇಂದ್ರ ಮೋದಿ ಅವರು ಇಂತಹ ಹೇಳಿಕೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಭಿವೃದ್ಧಿಯ ಕಾರ್ಯಸೂಚಿಯಿಂದ ದಿಕ್ಕುತಪ್ಪಿಸಲು ಸಾಧ್ಯವಿಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
**
ಸಂಘ ಪರಿವಾರದ ಕ್ಲರ್ಕ್ ಆಗಿರುವ ನರೇಂದ್ರ ಮೋದಿ ತಮ್ಮ ಅನುಭವದ ಮಾತಿನಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟೀಕಿಸಿದ್ದಾರೆ.
-ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.