ನವದೆಹಲಿ: ತಮಿಳು ಭಾಷಿಕರು ಹೆಚ್ಚಿರುವ ಪ್ರದೇಶಗಳಿಗೆ ಅಧಿಕಾರ ಹಂಚಿಕೆಗೆ ಅನುವು ಮಾಡಿಕೊಡಲಿರುವ ದ್ವೀಪರಾಷ್ಟ್ರದ ಸಂವಿಧಾನದ 13ನೇ ತಿದ್ದುಪಡಿಯನ್ನು ಅನುಷ್ಠಾನಗೊಳಿಸುವಂತೆ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.
ಭಾರತದ ಪ್ರವಾಸದಲ್ಲಿರುವ ಮಹಿಂದ ರಾಜಪಕ್ಸ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ‘ತಮಿಳು ಸಮುದಾಯದ ಆಶೋತ್ತರಗಳಿಗೆ ಶ್ರೀಲಂಕಾ ಸರ್ಕಾರ ಸ್ಪಂದಿಸುವ ವಿಶ್ವಾಸ ಇದೆ’ ಎಂದರು.
‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು’ ಎಂದೂ ಅವರು ಹೇಳಿದರು.