ಲಖನೌ: ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಬೃಹತ್ ಸಭೆ ಅಥವಾ ರ್ಯಾಲಿಗಳ ಬದಲು ಚಿಕ್ಕ ಸಭೆಗಳ ಮೂಲಕ ಮತದಾರರನ್ನು ತಲುಪುವ ಕಾರ್ಯತಂತ್ರವನ್ನು ಪಕ್ಷದ ಸ್ಥಳೀಯ ಮುಖಂಡರು ರೂಪಿಸುತ್ತಿದ್ದಾರೆ. ಈ ಬಗ್ಗೆ ಪ್ರಿಯಾಂಕಾ ಅವರು ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಹಿರಿಯ ನಾಯಕರು ತಿಳಿಸಿದ್ದಾರೆ.
ಪ್ರಿಯಾಂಕಾ ಅವರು ವಾರಾಣಸಿ ನಗರ ಮತ್ತು ಇತರೆಡೆ ಸುಮಾರು 12 ಸಭೆಗಳನ್ನು ನಡೆಸುವ ಸಾಧ್ಯತೆ ಇದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲ ವರ್ಗದ ಜನರು ಸೇರುವ ಸ್ಥಳಗಳಲ್ಲೇ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಪ್ರಿಯಾಂಕಾ ಮುಂದಿನ ವಾರ ಭೇಟಿ ನೀಡಿ, ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಭೆ ಮುಂದಕ್ಕೆ
ಅಹಮದಾಬಾದ್ನಲ್ಲಿ ಗುರುವಾರ ನಡೆಯಬೇಕಾಗಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯನ್ನು ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಕಾರಣ ಮುಂದೂಡಲಾಗಿದೆ.
ಅಹಮದಾಬಾದ್ನಲ್ಲಿ ರಾಹುಲ್ ಗಾಂಧಿ ಅವರ ಸಾರ್ವಜನಿಕ ಸಭೆಯನ್ನು ಸಹ ಮುಂದೂಡಲಾಗಿದೆ. ಪಕ್ಷದ ಹಿರಿಯ ಮುಖಂಡರು ಈ ಸಭೆಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲು ಉದ್ದೇಶಿಸಲಾಗಿತ್ತು.