ನವದೆಹಲಿ: ‘12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಉತ್ತೀರ್ಣಗೊಳಿಸಬೇಕು ಅಥವಾ ಹಿಂದಿನ ಆಂತರಿಕ ಪರೀಕ್ಷೆಯ ಆಧಾರದ ಮೇಲೆ ಅವರ ಅಂಕಗಳನ್ನು ನಿರ್ಧರಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ 2020–21ರ ಶೈಕ್ಷಣಿಕ ವರ್ಷದ ಕುರಿತು ಗೊಂದಲ ಮುಂದುವರಿದಿರುವ ನಡುವೆಯೇ, ಅವರು ಈ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೆ ಪರೀಕ್ಷೆ ಬರೆಯುವ ಒತ್ತಡವನ್ನು ವಿದ್ಯಾರ್ಥಿಗಳ ಮೇಲೆ ಹೇರಬಾರದು ಎಂದು ಸಲಹೆ ನೀಡಿದ್ದಾರೆ.
ಶಾಲೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಪಠ್ಯಕ್ರಮಗಳನ್ನು ಕಡಿಮೆ ಮಾಡಬಹುದು. ಕೋವಿಡ್ನಿಂದ ಪೂರ್ಣಗೊಳಿಸಲು ಸಾಧ್ಯವಾಗದ 2020–21ರ ಬೋಧನಾ ವಿಷಯಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪ್ರಯತ್ನದಿಂದಾಗಿ ಪೂರ್ಣಗೊಳಿಸಲು ಪ್ರಯತ್ನಿಸಬಹುದು ಎಂದು ಹೇಳಿದ್ದಾರೆ.
ಶೈಕ್ಷಣಿಕ ವರ್ಷ ವಿಳಂಬವಾಗುತ್ತಿರುವ ಬಗ್ಗೆ ಯಾವ ಕ್ರಮತೆಗೆದುಕೊಳ್ಳಬೇಕು ಎಂಬ ಬಗ್ಗೆ ಹಲವು ವಿಶ್ವವಿದ್ಯಾಲಯಗಳು ನಿರ್ಧರಿಸಲಿವೆ. ಸ್ವಾಯತ್ತ ಸಂಸ್ಥೆಗಳಾಗಿರುವ ವಿಶ್ವವಿದ್ಯಾಲಯಗಳಿಗೆ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಬಿಡಬೇಕು. ಸರ್ಕಾರ ತನ್ನ ನಿರ್ಧಾರವನ್ನು ವಿಶ್ವವಿದ್ಯಾಲಯಗಳ ಮೇಲೆ ಹೇರಬಾರದು ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತಿದೆ. ಮೊದಲ ವರ್ಷದ ಪದವಿ ತರಗತಿಗಳನ್ನು ಸೆಪ್ಟೆಂಬರ್ನಲ್ಲಿ ಆರಂಭಿಸಲು, ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್ನಲ್ಲಿ ಆರಂಭಿಸಲು ಈಗಾಗಲೇ ಯುಜಿಸಿ ಕಾಲೇಜುಗಳಿಗೆ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.