ನವದೆಹಲಿ:ಕೋಲ್ಕತ್ತದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಪ್ರತಿಭಟನೆ ಮುಂದುವರಿದಿದ್ದು, ಶನಿವಾರ ದೆಹಲಿಯಲ್ಲಿ ವೈದ್ಯರೊಬ್ಬರು ಪ್ರತಿಭಟನಾರ್ಥವಾಗಿ ಹೆಲ್ಮೆಟ್ ಧರಿಸಿ ಸೇವೆ ಸಲ್ಲಿಸಿದ್ದಾರೆ.
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಪ್ರತಿಭಟನೆ ಮುಂದುವರಿಸಿದ್ದು, ಆಸ್ಪತ್ರೆಯ ವೈದ್ಯ ಹೆಲ್ಮೆಟ್ ಧರಿಸಿ ರೋಗಿಗಳಿಗೆ ಸೇವೆ ಸಲ್ಲಿಸುತ್ತಲೇ ವಿಭಿನ್ನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರ ಮುಷ್ಕರ ಇಂದೂ ಮುಂದುವರಿದಿದ್ದು, ಆರೋಗ್ಯ ಸೇವೆ ಅಸ್ತವ್ಯಸ್ತಗೊಂಡಿದೆ. ವೈದ್ಯರನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಸ್ಥೆಯು (ಐಎಂಎ) ಜೂನ್ 17ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
Kolkata: Junior doctors of NRS Medical and Hospital continue their strike for the fifth day over violence against doctors. #WestBengalpic.twitter.com/FIAlKIFwDR
ಪ್ರತಿಭಟನಾನಿರತರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಧೋರಣೆಯನ್ನು ಖಂಡಿಸಿ 450ಕ್ಕೂ ಹೆಚ್ಚು ವೈದ್ಯರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬೇಷರತ್ ಕ್ಷಮೆ ಕೇಳಬೇಕು’ ಎಂದು ವೈದ್ಯರು ಆಗ್ರಹಿಸಿದ್ದಾರೆ.
ಕೋಲ್ಕತ್ತದಲ್ಲಿ 70 ವರ್ಷ ವಯಸ್ಸಿನ ರೋಗಿಯೊಬ್ಬರ ಸಾವಿನಿಂದಾಗಿ ಆಕ್ರೋಶಗೊಂಡ ಸಂಬಂಧಿಕರು, ಇಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ ಹಾಗೂ ರಕ್ಷಣೆ ಕೋರಿ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.