ನವದೆಹಲಿ: ಹಣ ವರ್ಗಾವಣೆ ಪ್ರಕರಣದಲ್ಲಿ ನೇರವಾಗಿ ರಾಬರ್ಟ್ ವಾದ್ರಾ ಅವರಿಗೆ ಸಂಪರ್ಕ ಇರುವ ಕಾರಣ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯಬೇಕಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ದೆಹಲಿ ಹೈಕೋರ್ಟ್ಗೆ ತಿಳಿಸಿತು.
ನ್ಯಾಯಮೂರ್ತಿ ಚಂದ್ರಶೇಖರ್ ಎದುರು ತನ್ನ ವಾದವನ್ನು ಮಂಡಿಸಿದ ತನಿಖಾ ಸಂಸ್ಥೆ ಪರ ವಕೀಲರು, ‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯನಾಗಿರುವ ವಾದ್ರಾ ಸದ್ಯ ಪ್ರಕರಣದ ತನಿಖೆಗೆ ಸಹಕರಿಸುತ್ತಿಲ್ಲ’ ಎಂದು ಪ್ರತಿಪಾದಿಸಿದರು.
ಆದರೆ, ಇ.ಡಿ ವಾದವನ್ನು ಅಲ್ಲಗಳೆದ ವಾದ್ರಾ ಪರ ವಕೀಲರು, ‘ನನ್ನ ಕಕ್ಷಿದಾರ ತನಿಖೆಗೆ ಎಲ್ಲ ರೀತಿಯಲ್ಲಿ ಸಹಕರಿಸುತ್ತಿದ್ದಾರೆ. ತನಿಖಾ ಸಂಸ್ಥೆ ಬಯಸಿದಾಗ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತಿದ್ದಾರೆ’ ಎಂದು ತಿಳಿಸಿದರು.
ನಿರೀಕ್ಷಣಾ ಜಾಮೀನು ಕೋರಿ ವಾದ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ. ಲಂಡನ್ನಲ್ಲಿ ಸುಮಾರು ₹ 17 ಕೋಟಿ ಮೌಲ್ಯದ ಆಸ್ತಿ ಖರೀದಿಗೆ ಸಂಬಂಧಿಸಿದ ನಿಯಮಬಾಹಿರವಾಗಿ ಹಣ ವರ್ಗಾವಣೆ ಮಾಡಿರುವ ಆರೋಪ ವಾದ್ರಾ ಮೇಲಿದೆ.