ನವದೆಹಲಿ: ಎನ್ಡಿಎ ಸರ್ಕಾರದ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇದೇ 13ರಂದು (ಬುಧವಾರ) ಕೇಂದ್ರದ ಸಚಿವ ಪರಿಷತ್ ಸಭೆ ಕರೆದಿದ್ದಾರೆ.
ಸಭೆಯು ಸಂಸತ್ ಭವನದಲ್ಲಿ ನಡೆಯಲಿದೆ. ಈ ಮಹತ್ವದ ಸಭೆಯಲ್ಲಿ ಭಾಗವಹಿಸುವಂತೆ ಎಲ್ಲ ಸಚಿವರಿಗೂ ಪ್ರಧಾನಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಮಂತ್ರಿ ಜನೌಷಧಿ ಯೋಜನೆ, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ನವೋದ್ಯಮ ನಿಧಿ ಯೋಜನೆ, ಮುದ್ರಾ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ಇನ್ನಿತರ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಿದ್ದಾರೆ.
ಸಂಕಷ್ಟದಲ್ಲಿರುವ ಕೃಷಿ ವಲಯಕ್ಕೆ ಪರಿಹಾರ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ. ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿತ್ತು.
ಏಳು ತಿಂಗಳ ಬಳಿಕ ಪ್ರಧಾನಿ ಸಚಿವ ಪರಿಷತ್ ಸಭೆ ಕರೆದಿದ್ದಾರೆ. ಹಲವು ರಾಜ್ಯಗಳಲ್ಲಿ ಇತ್ತೀಚಿನ ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾದ ನಂತರ ನಡೆಯುತ್ತಿರುವುದರಿಂದ ಈ ಸಭೆಗೆ ಮಹತ್ವ ಬಂದಿದೆ.