ನವದೆಹಲಿ: ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ತಡೆಯೊಡ್ಡಿರುವುದನ್ನು ಪ್ರಶ್ನಿಸಿ ಕೇರಳದ ಮಹಿಳೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ.
ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ 2018ರ ಸೆಪ್ಟಂಬರ್ನಲ್ಲಿ ತೀರ್ಪು ನೀಡಿತ್ತು. ತೀರ್ಪಿನ ಹೊರತಾಗಿಯೂ ಮಹಿಳೆಯರ ಪ್ರವೇಶಕ್ಕೆ ತಡೆಯೊಡ್ಡಲಾಗುತ್ತಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮುರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯ ಕಾಂತ್ ಅವರಿದ್ದ ನ್ಯಾಯಪೀಠವು, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೇಸ್ ಅವರು ಮಹಿಳೆಯ ಪರ ಸಲ್ಲಿಸಿದ ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿತು.