ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪ್ರಕಟಣೆ ತಡೆಗೆ ಕಾನೂನು ಜಾರಿಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸುಳ್ಳು ಸುದ್ದಿ ತಡೆಗಾಗಿ ಸಮಿತಿ ರಚಿಸಲು ಗೃಹ ಸಚಿವಾಲಯ, ಕಾನೂನು, ಮಾಹಿತಿ ಮತ್ತು ಪ್ರಸಾರ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ಅನುಜಾ ಕಪೂರ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ವಜಾ ಮಾಡಿದೆ.
ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಈ ಇಲಾಖೆಗಳ ಅಧಿಕಾರಿಗಳು ಮತ್ತು ವಿಭಾಗಗಳು ಜವಾಬ್ದಾರಿ ಹೊರಬೇಕು. ಇದರ ಹೊಣೆಯನ್ನು ಅವರೇ ಹೊರುವಂತೆ ಕಾನೂನು ಜಾರಿಗೊಳಿಸಬೇಕು ಎಂದು ಕಪೂರ್ ಮನವಿ ಮಾಡಿದ್ದರು.
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಗೆ ಸಂಬಂಧಿಸಿದಂತೆ ದೃಢಪಡದ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವುದನ್ನು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.