ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ನವೆಂಬರ್ 14ರಿಂದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಮಾನಿಸಿದೆ.
ಅರ್ಜಿಗಳಿಗೆ ಸಂಬಂಧಿಸಿಪ್ರಮಾಣ ಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಜಮ್ಮು ಕಾಶ್ಮೀರ ಆಡಳಿತಕ್ಕೆ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಸೂಚಿಸಿದೆ.
ಪ್ರಮಾಣಪತ್ರ ಸಲ್ಲಿಸಲು ಎರಡು ವಾರಕ್ಕಿಂತ ಹೆಚ್ಚಿನ ಸಮಯ ನೀಡಬಾರದು ಎಂದು ಮಾಡಿದ್ದಮನವಿಯನ್ನು ಕೋರ್ಟ್ ತಿರಸ್ಕರಿಸಿತು. ಪ್ರಮಾಣಪತ್ರ ಸಲ್ಲಿಸಲು ನ್ಯಾಯೋಚಿತವಾದ ಸಮಯ ನೀಡುವುದಾಗಿ ತಿಳಿಸಿತು.
ನಾಲ್ಕು ವಾರಗಳೊಳಗೆ ಸರ್ಕಾರಗಳು ಪ್ರಮಾಣಪತ್ರ ಸಲ್ಲಿಸಲಿದ್ದು, ಅಲ್ಲಿಂದ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಅವಕಾಶವಿದೆ.
ವಿಶೇಷಾಧಿಕಾರ ರದ್ದುಪಡಿಸಿದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೊಸ ಅರ್ಜಿಗಳನ್ನು ಸಲ್ಲಿಸುವುದಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ.
ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಆರ್. ಸುಭಾಷ್ ರೆಡ್ಡಿ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರು ಸಂವಿಧಾನ ಪೀಠದಲ್ಲಿದ್ದಾರೆ.