ನವದೆಹಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದ ತನಿಖೆಯನ್ನು ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕು ಎಂದು ಕೋರಿರುವ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ಶುಕ್ರವಾರ (ಡಿ. 14) ತೀರ್ಪು ನೀಡಲಿದೆ.
ನವೆಂಬರ್ 14ರಂದು ವಿಚಾರಣೆ ನಡೆಸಿದ್ದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ತೀರ್ಪು ಕಾಯ್ದಿರಿಸಿದ್ದರು.
ವಕೀಲ ಎಂ.ಎಲ್. ಶರ್ಮಾ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ವಿನೀತ್ ಧಂಡಾ ಎಂಬುವರು ಅರ್ಜಿ ಸಲ್ಲಿಸಿದ್ದರು. ಎಎಪಿ ಮುಖಂಡ ಸಂಜಯ್ ಸಿಂಗ್ ಅವರೂ ಕೋರ್ಟ್ ನಿಗಾದಲ್ಲಿ ತನಿಖೆಗೆ ಆಗ್ರಹಿಸಿದ್ದರು.
ರಫೇಲ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಎಫ್ಐಆರ್ ದಾಖಲಿಸಲು ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ಕೇಂದ್ರದ ಮಾಜಿ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕದ ತಟ್ಟಿದ್ದರು.
ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಖರೀದಿ ದರವನ್ನು ಬಹಿರಂಗಗೊಳಿಸಲು ನಿರಾಕರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.