ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ‘ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಹಿಂದುತ್ವವಾದಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಕಾಂಗ್ರೆಸ್ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ’ ಎಂದು ರಾವ್ ಆರೋಪಿಸಿದರು. ಶೂ ದಾಳಿಯನ್ನು ಖಂಡಿಸಿದ ರಾವ್, ‘ಕಾಂಗ್ರೆಸ್ ಮನೋಸ್ಥಿತಿಯನ್ನು ವ್ಯಕ್ತಪಡಿಸಲು ಆ ವ್ಯಕ್ತಿ ಇಲ್ಲಿಗೆ ಬಂದಿದ್ದ’ ಎಂದು ಹೇಳಿದ್ದಾರೆ. 2009ರ ಚುನಾವಣೆಯಲ್ಲಿ ಶೂ ಎಸೆತದ ಘಟನೆಗಳು ನಡೆದಿದ್ದವು. ಸಿಖ್ ವಿರೋಧಿ ದಂಗೆಯ ಆರೋಪಿಗಳಾದ ಸಜ್ಜನ್ ಕುಮಾರ್ ಮತ್ತು ಜಗದೀಶ್ ಟೈಟ್ಲರ್ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಮೇಲೆ ಪತ್ರಕರ್ತ ಜರ್ನೈಲ್ ಸಿಂಗ್ ಎಂಬಾತ ಶೂ ಎಸೆದಿದ್ದ.