ಬಾಲ್ಯ ವಿವಾಹ | ಕಾನೂನು ತಿದ್ದುಪಡಿಗೆ ಚಿಂತನೆ: ಸಚಿವೆ ಇರಾನಿ

ನವದೆಹಲಿ: ‘ಬಾಲ್ಯ ವಿವಾಹ ನೆರವೇರಿದ ಮಾಹಿತಿ ಪಡೆದ ಅಧಿಕಾರಿಗಳು, ಅವುಗಳ ಕುರಿತು ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಸಂಸತ್ನಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಈ ಸಂಬಂಧ ಬಾಲ್ಯ ವಿವಾಹ ತಡೆ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.
‘ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯರು ಗರ್ಭಧರಿಸುತ್ತಿರುವ ಪ್ರಮಾಣ ಶೇ 21ರಷ್ಟಿದೆ. ಅಲ್ಲದೇ, ಇಂತಹ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಅಪೌಷ್ಟಿಕತೆ ಪ್ರಮಾಣವೂ ಹೆಚ್ಚು ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ’ ಎಂದು ಸಚಿವೆ ಇರಾನಿ ಸದನಕ್ಕೆ ವಿವರಿಸಿದರು.
‘ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಸಂದರ್ಭದಲ್ಲಿ, ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡುವುದು ಕಡ್ಡಾಯ. ಪಾಲಕರು, ವೈದ್ಯರು, ಶಾಲಾ ಸಿಬ್ಬಂದಿಗೂ ಈ ನಿಯಮ ಅನ್ವಯವಾಗುತ್ತದೆ. ಇದೇ ಮಾದರಿಯಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆಗೂ ತಿದ್ದುಪಡಿ ತರುವುದು ಅವಶ್ಯ’ ಎಂದು ಪ್ರತಿಪಾದಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.