ಲಖನೌ: ಒಂದು ಕಾಲದಲ್ಲಿ ರಾಜಕೀಯ ಬದ್ಧ ವೈರಿಗಳಾಗಿದ್ದ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ನಿರೀಕ್ಷೆಯಂತೆ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ.
ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ತಲಾ 38 ಕ್ಷೇತ್ರಗಳಲ್ಲಿ ಹಂಚಿಕೊಂಡಿವೆ. ಎರಡು ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಡಲು ನಿರ್ಧರಿಸಿವೆ.
ಆದರೆ, ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರಗಿಡಲಾಗಿದೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಮೈತ್ರಿಕೂಟ ನಿರ್ಧರಿಸಿದೆ.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಲಖನೌದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.
‘ಈ ಮೈತ್ರಿ 'ಗುರು-ಚೇಲಾ' (ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ) ಅವರ ನಿದ್ರೆ ಗೆಡಿಸಿದೆ. ದೇಶದಲ್ಲಿ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಲಿದೆ’ ಎಂದು ಉಭಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.
**
ಎಸ್ಪಿ–ಬಿಎಸ್ಪಿ ತಮ್ಮ ಅಸ್ತಿತ್ವದ ಉಳಿವಿಗಾಗಿ ಕೈಜೋಡಿಸಿವೆಯೇ ಹೊರತು ದೇಶದ ಒಳಿತಾಗಿ ಅಲ್ಲ. ಮೋದಿ ಅವರನ್ನು ಎದುರಿಸಲು ಸಾಧ್ಯವಾಗದೆ ಮೈತ್ರಿ ಮಾಡಿಕೊಂಡಿವೆ.