ಜೈಪುರ/ಭೋಪಾಲ್/ರಾಯಪುರ: ಕಾಂಗ್ರೆಸ್ ಸರ್ಕಾರ ರಚನೆಗೆ ಮುಂದಾಗಿರುವ ಮೂರೂ ರಾಜ್ಯಗಳಲ್ಲಿ ಸೋಮವಾರ ನಿಯೋಜಿತ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದ್ದು, ಇದು ವಿರೋಧ ಪಕ್ಷಗಳ ಬಲ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ವಿರೋಧ ಪಕ್ಷಗಳ ನಾಯಕರನ್ನು ಮೂರೂ ರಾಜ್ಯಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ಕಾಂಗ್ರೆಸ್ನ ಹಲವು ಮುಖಂಡರು ಭಾಗಿಯಾಗಲಿದ್ದಾರೆ.ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಇರಲಿದ್ದಾರೆ.
ಇಂದಿನ ಸಮಾರಂಭವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ‘ಮಹಾಮೈತ್ರಿಯ ಮತ್ತೊಂದು ಮಹಾ ವೇದಿಕೆ’ ಎಂದು ಕರೆದಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಬೆಳಿಗ್ಗೆ 10ಕ್ಕೆ ಅಶೋಕ್ ಗೆಹ್ಲೋಟ್(ಸಿಎಂ) ಮತ್ತು ಸಚಿನ್ ಪೈಲಟ್(ಡಿಸಿಎಂ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಮಧ್ಯಾಹ್ನ 1:30ಕ್ಕೆ ಕಮಲ ನಾಥ್ ಹಾಗೂ ಛತ್ತೀಸಗಡದ ರಾಯಪುರದಲ್ಲಿ ಸಂಜೆ 5ಕ್ಕೆ ಭೂಪೇಶ್ ಬಘೆಶ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾಗಿದೆ.
ಸಮಾರಂಭದಲ್ಲಿ ಭಾಗಿಯಾಗಲಿರುವ ಪ್ರಮುಖರು
ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ಕರ್ನಾಟಕ ಸಿಎಂ ಎಚ್.ಡಿ.ಕುಮಾರಸ್ವಾಮಿ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಮುಖಂಡ ದಿನೇಶ್ ತ್ರಿವೇದಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲ, ಎಲ್ಜೆಡಿ ಮುಖ್ಯಸ್ಥ ಶರದ್ ಯಾದವ್, ಡಿಎಂಕೆ ಅಧ್ಯಕ್ಷ ಎಂಕೆ ಸ್ಯಾಲಿನ್ ಮತ್ತು ಪಕ್ಷದ ನಾಯಕಿ ಕನಿಮೋಳಿ, ಆರ್ಜೆಡಿಯ ತೇಜಸ್ವಿ ಯಾದವ್, ಜೆಎಂಎಂನ ಹೇಮಂತ್ ಸೊರೇನ್, ಆರ್ಎಲ್ಡಿಯ ಜಯಂತ್ ಚೌಧರಿ, ಎಚ್ಎಎಂನ ಜಿತನ್ ರಾಮ್ ಮಂಝಿ, ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಂತ್ರ)ದ ಬಾಬುಲಾಲ್ ಮರಾಂಡಿ, ಐಯುಎಂಎಲ್ನ ಪಿ.ಕೆ.ಕುನ್ಹಲಿಕುಟ್ಟಿ, ಎಐಯುಡಿಎಫ್ನ ಬದ್ರುದ್ದಿನ್ ಅಜ್ಮಲ್, ಸ್ವಾಭಿಮಾನಿ ಪಕ್ಷದ ರಾಜು ಶೆಟ್ಟಿ, ಆರ್ಎಲ್ಎಸ್ಪಿಯ ಉಪೇಂದ್ರ ಕುಶ್ವಾ ಸೇರಿ ಹಲವು ಮುಖಂಡರು ಭಾಗಿಯಾಗಲಿದ್ದಾರೆ.
ಅಶೋಕ್ ಗೆಹ್ಲೊಟ್ ವಿರೋಧ ಪಕ್ಷಗಳ ಮುಖಂಡರಿಗೆ ಪತ್ರ ಮುಖೇನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.