ಅಲೀಗಡ: ಲಾಕ್ಡೌನ್ ಆದೇಶ ಉಲ್ಲಂಘಿಸಿ ಮಸೀದಿಯೊಂದರಲ್ಲಿ ಉಳಿದುಕೊಂಡಿದ್ದ ಶ್ರೀಲಂಕಾದ ಇಬ್ಬರು ಪ್ರಜೆಗಳು ಸೇರಿದಂತೆ ಒಟ್ಟು 13 ತಬ್ಲೀಗಿ ಜಮಾತ್ ಸದಸ್ಯರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಬುಧವಾರ ಪೊಲೀಸರು ತಿಳಿಸಿದ್ದಾರೆ.
ಶ್ರೀಲಂಕಾದ ಇಬ್ಬರು ಪ್ರಜೆಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಉಳಿದ 11 ಮಂದಿ ಜಮಾತ್ ಸದಸ್ಯರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾ ಪ್ರಜೆಗಳ ಬಂಧನ ಕುರಿತು ದೆಹಲಿಯಲ್ಲಿರುವ ಶ್ರೀಲಂಕಾ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
13 ಮಂದಿಯ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 188 (ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘನೆ) ಮತ್ತು 269 (ಜೀವಕ್ಕೆ ಅಪಾಯಕಾರಿಯಾದ ಸೋಂಕು ಹರಡುವ ವಿಚಾರದಲ್ಲಿ ನಿರ್ಲಕ್ಷ್ಯ) ಅನ್ವಯ ಪ್ರರಕಣ ದಾಖಲಿಸಲಾಗಿದೆ.
ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವೀಸಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾದ ಪ್ರಜೆಗಳ ಮೇಲೆ ವಿದೇಶಿಯರ ಕಾಯ್ದೆಯ ಸೆಕ್ಷನ್ 14 ಮತ್ತು 14 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ನಲ್ಲಿ ನಡೆದ ತಬ್ಲೀಗಿ ಜಮಾತ್ ಸಭೆಯಲ್ಲಿ ಭಾರತದ ವಿವಿಧ ಕಡೆಗಳಿಂದ ಮತ್ತು ವಿದೇಶಗಳಿಂದ ಸುಮಾರು 9 ಸಾವಿರ ಜನ ಭಾಗವಹಿಸಿದ್ದರು.