ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಕೋರಮಂಗಲ– ಚಲಘಟ್ಟ ತ್ಯಾಜ್ಯ ನೀರಿನ ಸಂಸ್ಕರಣ ಯೋಜನೆ ಪ್ರಶ್ನಿಸಿ ರೈತರಿಂದ ಪಿಐಎಲ್
Last Updated 19 ಜೂನ್ 2018, 11:40 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋರಮಂಗಲ-ಚಲಘಟ್ಟ ಕಣಿವೆಯ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ 163 ಕೆರೆಗಳಿಗೆ ತುಂಬಿಸುವುದರಿಂದ ಅಂತರ್ಜಲ ವಿಷಮಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ’ ಎಂದು ಆಕ್ಷೇಪಿಸಿ ಈ ಭಾಗದ ರೈತರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರೂ ಆದ ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿಯ ಆರ್.ಆಂಜನೇಯ ರೆಡ್ಡಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ, ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ (ಸಿಜಿಡಬ್ಲ್ಯುಬಿ), ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಪ್ರತಿವಾದಿಗಳು ಆಕ್ಷೇಪ ಸಲ್ಲಿಸುವಂತೆಯೂ ಸೂಚಿಸಲಾಗಿದ್ದು, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್, ‘ಕೆ.ಸಿ.ವ್ಯಾಲಿಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸದಂತೆ ಮಧ್ಯಂತರ ಆದೇಶ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ನ್ಯಾಯಪೀಠವು, ‘ಪ್ರತಿವಾದಿಗಳು ತಮ್ಮ ಆಕ್ಷೇಪ ಸಲ್ಲಿಸಲಿ. ನಂತರ ಮುಂದಿನ ವಿಚಾರಣೆ ವೇಳೆ ಈ ಬಗ್ಗೆ ಪರಿಶೀಲಿಸೋಣ’ ಎಂದು ಹೇಳಿತು.

ಎನ್‌ಜಿಟಿಗೆ ಹೋಗಬಹುದಲ್ಲಾ?: ‘ವಿಷಯ ಗಂಭೀರವಾಗಿರುವುದರಿಂದ ಮತ್ತು ಪರಿಸರಕ್ಕೆ ಸಂಬಂಧಿಸಿರುವುದರಿಂದ, ಅರ್ಜಿದಾರರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮುಂದೆ ಏಕೆ ಹೋಗಬಾರದು’ ಎಂದೂ ನ್ಯಾಯಪೀಠ ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಐಸಾಕ್‌, ‘ಇದು ಲಕ್ಷಾಂತರ ಸಾರ್ವಜನಿಕರ ಆರೋಗ್ಯದ ವಿಚಾರ. ಹಾಗಾಗಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಹೈಕೋರ್ಟ್‌ ಕದ ತಟ್ಟಿದ್ದೇವೆ’ ಎಂದರು.

ಅಧ್ಯಯನ ನಡೆದಿಲ್ಲ: ‘ಈ ಯೋಜನೆ ಜಾರಿಗೊಳ್ಳುವ ಮುನ್ನ ಯಾವುದೇ ವೈಜ್ಞಾನಿಕ ಅಧ್ಯಯನ ನಡೆಸಿಲ್ಲ. ವಿಜ್ಞಾನಿಗಳ ನೆರವು ಪಡೆದಿಲ್ಲ. ಇದರಿಂದಾಗಿ ನೀರು ಹರಿಯುವ ಭಾಗದ ಸುಮಾರು 50 ಲಕ್ಷ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ’ ಎಂದೂ ಐಸಾಕ್‌ ಆರೋಪಿಸಿದರು.

‘ಸಂಸ್ಕರಿಸಿದ ನೀರು ಅಂತರ್ಜಲ ಸೇರುವುದರಿಂದ ಅದು ಕಲುಷಿತವಾಗುತ್ತದೆ. ಈಗಾಗಲೇ ಅಂತರ್ಜಲದಲ್ಲಿ ಫ್ಲೋರೈಡ್ ಮತ್ತು ನೈಟ್ರೇಟ್ ಅಂಶ ಹೆಚ್ಚಾಗುತ್ತಿದೆ. ಇದೀಗ ಇವುಗಳ ಜೊತೆ ಸೀಸ ಮತ್ತಿತರ ರಾಸಾಯನಿಕವೂ ಸೇರಿದರೆ ಅದು ಇನ್ನಷ್ಟು ವಿಷಕಾರಿಯಾಗು ತ್ತದೆ’ ಎಂದು ಆತಂಕವ್ಯಕ್ತಪಡಿಸಿದರು.

ತ್ಯಾಜ್ಯ ನೀರನ್ನು ಸಂಸ್ಕರಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ಹರಿಸಲಾಗುತ್ತಿದೆ. 2018ರ ಜೂನ್‌ 7ರಂದು ಕೆಲವು ಕೆರೆಗಳಿಗೆ ಈಗಾಗಲೇ ನೀರು ಹರಿಸಲಾಗಿದೆ.

‘ತಜ್ಞರ ಅಭಿಪ್ರಾಯ ಪಡೆಯಲಾಗಿದೆ’
ಅರ್ಜಿದಾರರ ಆಕ್ಷೇಪಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲ ಡಿ.ನಾಗರಾಜ್‌, ‘ಯೋಜನೆ ಆರಂಭಿಸುವಾಗಲೇ ತಜ್ಞರ ಅಭಿಪ್ರಾಯ ಪಡೆಯಲಾಗಿದೆ’ ಎಂದರು.

‘ಕೆರೆಗಳಿಗೆ ಸಂಸ್ಕರಿಸಿದ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಯಾಗುತ್ತಿದೆ. ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ’ ಎಂದು ಹೇಳಿದರು.

‘ಯೋಜನೆ 2014ರಲ್ಲೇ ಆರಂಭವಾಗಿದ್ದು, ಈಗ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿದೆ. ಕೆರೆಗಳಿಗೆ ಈಗಾಗಲೇ ನೀರು ಹರಿಸಲಾಗುತ್ತಿದೆ. ತ್ಯಾಜ್ಯ ನೀರನ್ನು ಸಂಸ್ಕರಿಸಿದ ನಂತರ ನೀರು ಹರಿಸಲಾಗುತ್ತಿದೆ’ ಎಂದು ಸಮಜಾಯಿಷಿ ನೀಡಿದರು.

ಮೂರು ಜಿಲ್ಲೆಗಳಿಗೆ ಕುಡಿಯುವ ನೀರು
ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ 610 ಎಂಎಲ್‌ಡಿ ನೀರು ಪೂರೈಸುವ ಕೆ.ಸಿ. ವ್ಯಾಲಿ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದೆ.

ಬೆಂಗಳೂರಿನ ಎರಡು ಕಣಿವೆಗಳಲ್ಲಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಆ ನೀರನ್ನು ಈ ಜಿಲ್ಲೆಗಳ ಕೆರೆಗಳಿಗೆ ಹರಿಸಲಾಗುತ್ತಿದೆ. 2018ರ ಜೂನ್‌ 7ರಂದು ಕೆಲವು ಕೆರೆಗಳಿಗೆ ಈಗಾಗಲೇ ನೀರು ಹರಿಸಲಾಗಿದೆ.

‘ಮರುಪರಿಶೀಲಿಸಬೇಕಾದೀತು’
‘ಕೆರೆಗಳಿಗೆ ನೀರು ತುಂಬುವ ನೆಪದಲ್ಲಿ ಮಾಲಿನ್ಯವನ್ನು ಭರ್ತಿ ಮಾಡಬೇಡಿ’ ಎಂದು ನ್ಯಾಯಪೀಠ ಕಿವಿಮಾತು ಹೇಳಿದೆ.

‘ಒಂದು ವೇಳೆ ಸಂಸ್ಕರಿಸಿದ ನೀರು ಮಾಲಿನ್ಯಕಾರಿ ಎಂದಾದರೆ ಪರಿಸ್ಥಿತಿ ಗಂಭೀರವಾಗುತ್ತದೆ. ಆಗ ಯೋಜನೆಯನ್ನೇ ಮರುಪರಿಶೀಲಿಸಬೇಕಾದೀತು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT