ರಾಮನಗರ: ಎಂಟಕ್ಕೂ ಹೆಚ್ಚು ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಸೈಕೋ ಕಿಲ್ಲರ್ ದೊರೆ ಅಲಿಯಾಸ್ ಕತ್ತಲರಾಜ್ (50) ಎಂಬಾತನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ತಮಿಳುನಾಡಿನವನಾದ ಆರೋಪಿ ಬೆಂಗಳೂರಿನ ಬ್ಯಾಡರಹಳ್ಳಿ, ಪೀಣ್ಯ ಠಾಣೆಗಳ ವ್ಯಾಪ್ತಿಯಲ್ಲಿ ಹಾಗೂ ತಮಿಳುನಾಡಿನಲ್ಲಿಯೂ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪ ಹೊತ್ತಿದ್ದಾನೆ.
ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸ್ನೇಹ ಬೆಳೆಸುತ್ತಿದ್ದ ಆತ ಅವರನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ, ಬಳಿಕ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ.
ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿಯೇ ಇಂತಹ ಆರು ಪ್ರಕರಣಗಳು ನಡೆದಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದ ತಂಡವು ದಾಳಿ ಮಾಡಿ ಆರೋಪಿಯನ್ನು ಬಂಧಿಸಿತು.
‘ಆರೋಪಿಯು ಇನ್ನೂ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಇದ್ದು, ವಿಚಾರಣೆ ಮುಂದುವರಿದಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.