ನವದೆಹಲಿ: ‘ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪ್ರಕ್ರಿಯೆ ತಡೆಯಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ದೂರಿದ್ದಾರೆ.
‘ನಿಜವಾದ ಭಾರತೀಯರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ಭಾರತೀಯರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ನೋಂದಣಿ ಪ್ರಕ್ರಿಯೆ ತಡೆಯುವ ಶಕ್ತಿಗಳನ್ನು ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ. 1971ರ ನಂತರದ ಅಕ್ರಮ ವಲಸೆಗಾರರನ್ನು ಗುರುತಿಸುವುದೇ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.
‘ಎನ್ಆರ್ಸಿ ಹೆಸರಿನಲ್ಲಿ ಕೆಲವು ಸಂಘಟನೆಗಳು ಹಿಂಸಾಚಾರ ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇಂತಹ ಪ್ರಯತ್ನಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.
ಜುಲೈ 31ರಂದು ಎನ್ಆರ್ಸಿಯ ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಉಂಟಾಗುವ ಪರಿಸ್ಥಿತಿ ನಿಭಾಯಿಸುವ ಕುರಿತು ನವದೆಹಲಿಗೆ ಬಂದಿರುವ ಸೋನೊವಾಲ್, ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
2018ರ ಜುಲೈ 30ರಂದು ಎನ್ಆರ್ಸಿ ಕರಡು ಪ್ರತಿ ಪ್ರಕಟಿಸಿದಾಗ ಭಾರಿ ವಿವಾದ ಸೃಷ್ಟಿಯಾಗಿತ್ತು. ಸುಮಾರು 40.7 ಲಕ್ಷ ಮಂದಿ ಕರಡು ಪ್ರತಿಯಿಂದ ಹೊರಗುಳಿದಿದ್ದರು.