ಲಖನೌ: ‘ಮುಸ್ಲಿಮರಿಗೆ ಪ್ರವೇಶವಿಲ್ಲ’ ಎಂಬ ಪೋಸ್ಟರ್ ಹಾಕಿದ ಆರೋಪದಲ್ಲಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ಜಿಲ್ಲೆಯ ಗ್ರಾಮವೊಂದರ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಾಂದಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ದುಸೌತಿ ಗ್ರಾಮದಲ್ಲಿ ಪೋಸ್ಟರ್ ಹಾಕಲಾಗಿತ್ತು. ನೆರೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದ ಮೂರು ದಿನಗಳ ಬಳಿಕ ಪೋಸ್ಟರ್ ಹಾಕಲಾಗಿತ್ತು ಎನ್ನಲಾಗಿದೆ.
ಪೋಸ್ಟರ್ನ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೋಸ್ಟರ್ನಲ್ಲಿರುವ ಛಾಯಾಚಿತ್ರದಲ್ಲಿರುವವರ ಪೈಕಿ ಮೂವರು ಯುವಕರನ್ನು ಬಂಧಿಸಲಾಗಿದ್ದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತರ ವಿರುದ್ಧ, ‘ಧರ್ಮದ ಆಧಾರದಲ್ಲಿ ಹಗೆತನಕ್ಕೆ ಪ್ರಚೋದನೆ ನೀಡುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸಲು ದುರುದ್ದೇಶಪೂರಿತ ಕೃತ್ಯ ಎಸಗುವುದು, ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘನೆ’ ಅನ್ವಯ ಪ್ರಕರಣ ದಾಖಲಿಸಲಾಗಿದೆ.