ಉಡುಪಿ: ‘ಬಿಜೆಪಿ ಮುಖಂಡರಿಗೆ ಶಾಂತಿಯುತವಾಗಿ ಚುನಾವಣೆ ನಡೆಸಿ ಅಭ್ಯಾಸ ಇಲ್ಲ, ಆದ್ದರಿಂದ ಇದೇ 12ರ ಮೊದಲು ಗಲಭೆ ಎಬ್ಬಿಸಿ ಜನರ ದಿಕ್ಕು ತಪ್ಪಿಸೋ ಸಾಧ್ಯತ ಇದೆ. ಈ ಬಗ್ಗೆ ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು’ ಎಂದು ನಟ ಪ್ರಕಾಶ್ ರೈ ಹೇಳಿದರು.
ಉಡುಪಿಯಲ್ಲಿ ಮಂಗಳವಾರ ನಡೆದ ‘ಜಸ್ಟ್ ಆಸ್ಕಿಂಗ್’ ಅಭಿಯಾನದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
'ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಬಂದರೂ ಯಡಿಯೂರಪ್ಪ ಅವರು ಮೂರು ತಿಂಗಳು ಸಹ ಮುಖ್ಯಮಂತ್ರಿಯಾಗಿರುವುದಿಲ್ಲ. ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಬೇರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತಾರೆ. ಏಕೆಂದರೆ ಮತ ಗಳಿಸುವ ಉದ್ದೇಶದಿಂದ ಮಾತ್ರ ಅವರನ್ನು ಮುಂದಿಟ್ಟುಕೊಂಡಿದ್ದಾರೆ. ಬಿಜೆಪಿಯ ಇಂತಹ ಆಟವನ್ನು ಈ ಹಿಂದೆ ಸಹ ಕರ್ನಾಟಕದ ಜನರು ನೋಡಿದ್ದಾರೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ತಮ್ಮ ಆಸೆ ತೀರಿಸಿಕೊಳ್ಳಲು ಮೂರು ಮಂದಿ ಮುಖ್ಯಮಂತ್ರಿಯಾಗಿದ್ದರು’ ಎಂದು ವ್ಯಂಗ್ಯವಾಡಿದರು.