ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈಚೆಗೆ ಘೋಷಿಸಿದ್ದ ₹ 20 ಲಕ್ಷ ಕೋಟಿ ಮೊತ್ತದ ಹಣಕಾಸು ಪ್ಯಾಕೇಜ್ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಸುದ್ದಿಗೋಷ್ಠಿ ನಡೆಸಿ 5ನೇ ಮತ್ತು ಕೊನೆಯ ವಿವರಣೆ ನೀಡಿದರು.
‘ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತದ ಕನಸನ್ನು ಸಾಕಾರಗೊಳಿಸಲು ಭೂಮಿ, ಕಾರ್ಮಿಕರು, ಹಣಕಾಸು ಲಭ್ಯತೆ ಮತ್ತು ಕಾನೂನುಗಳಲ್ಲಿ ಅಗತ್ಯ ಪರಿವರ್ತನೆ ತರಲಾಗುವುದು. ಇವೆಲ್ಲವೂ ಈ ಪ್ಯಾಕೇಜ್ನಲ್ಲಿವೆ’ ಎಂದು ಹೇಳಿದರು.
ಭಾರತೀಯ ಆಹಾರ ನಿಗಮ (ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ), ನಫೇಡ್ ಮತ್ತು ರಾಜ್ಯ ಸರ್ಕಾರಗಳು ಬಡವರಿಗೆ ಮತ್ತು ಅಗತ್ಯವಿರುವವರಿಗೆ ಸಾಕಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ವಿತರಿಸುತ್ತಿವೆ ಎಂದು ಮೆಚ್ಚುಗೆಯ ಮಾತುಗಳನ್ನು ಆಡಿದರು.
ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚುವರಿ ಅನುದಾನ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು, ವ್ಯವಹಾರ ನಿರ್ವಹಿಸುವುದನ್ನು ಸುಲಭಗೊಳಿಸಲು ನೆರವು ಸೇರಿದಂತೆ ಹಲವು ವಿಚಾರಗಳನ್ನು ನಿರ್ಮಲಾ ಪ್ರಸ್ತಾಪಿಸಿದರು.
ಉದ್ಯೋಗ ಖಾತ್ರಿ ಯೋಜನೆ
ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ ಅಂದಾಜಿನಲ್ಲಿ ಒದಗಿಸಿದ್ದ ₹ 61 ಸಾವಿರ ಕೋಟಿ ಅನುದಾನದ ಜೊತೆಗೆ ಹೆಚ್ಚುವರಿಯಾಗಿ ₹40 ಸಾವಿರ ಕೋಟಿ ಅನುದಾನ ಒದಗಿಸಲಾಗುವುದು. ಇದರಿಂದ 300 ಕೋಟಿ ಹೆಚ್ಚುವರಿ ಮಾನವ ದಿನಗಳು ಸೃಷ್ಟಿಯಾಗಲಿವೆ. ನಗರಗಳಿಂದ ಹಳ್ಳಿಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಹೇಳಿದರು.
ಸಾಂಕ್ರಾಮಿಕ ರೋಗಗಳ ಆಸ್ಪತ್ರೆ
ಆರೋಗ್ಯ ಕ್ಷೇತ್ರದ ಮೇಲೆ ಮಾಡುತ್ತಿದ್ದ ಸರ್ಕಾರಿ ವೆಚ್ಚವನ್ನು ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ತಳಮಟ್ಟದಲ್ಲಿ (ಗ್ರಾಮೀಣ ಮತ್ತು ಸಣ್ಣ ಪಟ್ಟಣಗಳು) ಆಸ್ಪತ್ರೆ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳ ವಿಶೇಷ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ವಲಯಗಳಲ್ಲಿಯೂ (ಬ್ಲಾಕ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ವಿವರಿಸಿದರು.
ಶೈಕ್ಷಣಿಕ ವ್ಯವಸ್ಥೆಯಲ್ಲಿ ತಂತ್ರಜ್ಞಾನ
‘ದೀಕ್ಷಾ’ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡುವ ವಿಚಾರವನ್ನು ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದರು. ಶೀಘ್ರದಲ್ಲಿಯೇ ಬಹು ಆಯಾಮದ ಡಿಜಿಟಲ್ ಮತ್ತು ಆನ್ಲೈನ್ ಶಿಕ್ಷಣ ವ್ಯವಸ್ಥೆಯನ್ನು ‘ಪ್ರಧಾನ ಮಂತ್ರಿ ಇ ವಿದ್ಯಾ’ ಯೋಜನೆಯ ಹೆಸರಿನಲ್ಲಿ ಆರಂಭಿಸಲಾಗುವುದು. 1ರಿಂದ 12ನೇ ತರಗತಿಯವರೆಗೆ ಪ್ರತ್ಯೇಕ ಟಿವಿಚಾನೆಲ್ ಆರಂಭಿಸಲಾಗುವುದು ಎಂದು ಹೇಳಿದರು. ರೇಡಿಯೊ, ಕಮ್ಯುನಿಟಿ ರೇಡಿಯೊ, ಪೋಡ್ಕಾಸ್ಟ್ ಆರಂಭಿಸಲು ಯೋಜಿಸಲಾಗಿದೆ. ಅಂಧರು ಮತ್ತು ಶ್ರವಣ ದೋಷವುಳ್ಳವರ ನೆರವಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಮೇ 30ರ ನಂತರ ದೇಶದ ಪ್ರಮುಖ 100 ವಿಶ್ವವಿದ್ಯಾಲಯಗಳು ಆನ್ಲೈನ್ ಕೋರ್ಸ್ಗಳನ್ನು ಆರಂಭಿಸಲಿವೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲ ನೀಡಲು ‘ಮನೋದರ್ಪಣ್‘ ಕಾರ್ಯಕ್ರಮ ಆರಂಭಿಸಲಾಗುವುದು ಎಂದರು.
ಸಾಲ ವಸೂಲಿ, ದಿವಾಳಿ ಪ್ರಕ್ರಿಯೆ
ಕೋವಿಡ್–1ರಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಪ್ರಕರಣಗಳನ್ನು ಸಾಲ ವಸೂಲಾತಿ ಮತ್ತು ದಿವಾಳಿ ಘೋಷಣೆ ಪ್ರಕ್ರಿಯೆಯಿಂದ ಹೊರಗಿಡಲಾಗುವುದು. ಮುಂದಿನ ಒಂದು ವರ್ಷದ ಅವಧಿಯಲ್ಲಿ ಯಾವುದೇ ಹೊಸ ವಿಚಾರಣೆ ಆರಂಭಿಸುವುದಿಲ್ಲ. ಈಗ ಹಿಂದೆ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ 6 ತಿಂಗಳ ಅವಧಿಗೆ ಹೊಸ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.