ಜೋಧಪುರ: ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದ್ದು, ನಗರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.
ಅಸಾರಾಂ ಅನುಯಾಯಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂಬ ಭೀತಿ ಇದೆ. ಹಾಗಾಗಿ ಎಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದು ಇದೇ 30ರವರೆಗೂ ಮುಂದುವರಿಯಲಿದೆ.
ರಾಜಸ್ಥಾನ ಹೈಕೋರ್ಟ್ ನಿರ್ದೇಶನದಂತೆ, ಜೋಧಪುರ ಕೇಂದ್ರ ಕಾರಾಗೃಹದ ಆವರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
‘ತೀರ್ಪು ಪ್ರಕಟಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೈಲಿನ ಆವರಣದಲ್ಲಿ ಮ್ಯಾಜಿಸ್ಟ್ರೇಟ್, ನ್ಯಾಯಾಲಯದ ಅಧಿಕಾರಿಗಳು, ಅಸಾರಾಂ ಮತ್ತು ಸಹ ಆರೋಪಿಗಳು, ವಾದಿ–ಪ್ರತಿವಾದಿಗಳ ವಕೀಲರು ಇರಲಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಸಿಂಗ್ ತಿಳಿಸಿದ್ದಾರೆ.
2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್ಪುರದ ಬಾಲಕಿ ದೂರು ನೀಡಿದ್ದಳು. ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. ಸೆಪ್ಟೆಂಬರ್ 2ರಿಂದ ನ್ಯಾಯಾಂಗ ವಶದಲ್ಲಿದ್ದಾರೆ.
ಅಸಾರಾಂ ಜತೆಗೆ ಶಿವ, ಶಿಲ್ಪಿ, ಶರದ್ ಹಾಗೂ ಪ್ರಕಾಶ್ ವಿರುದ್ಧ ಭಾರತೀಯ ದಂಡಸಂಹಿತೆ, ಪೋಕ್ಸೊ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ 2013ರ ನವೆಂಬರ್ 6ರಂದು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 7ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ಏಪ್ರಿಲ್ 25ಕ್ಕೆ ಆದೇಶ ಕಾಯ್ದಿರಿಸಿತ್ತು.