ಕೋಲಾರ: ‘ಕಲಬುರ್ಗಿ ಜಿಲ್ಲೆ ಚಿಂಚೋಳಿ ಶಾಸಕ ಉಮೇಶ್ ಜಾಧವ ಅವರ ರಾಜೀನಾಮೆ ಸಂಬಂಧ ಕೆಲ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದ್ದೇನೆ. ಆದರೆ, ಅವರು ಪ್ರಮಾಣಪತ್ರ ಸಲ್ಲಿಸದ ಕಾರಣ ರಾಜೀನಾಮೆ ಅಂಗೀಕರಿಸಿಲ್ಲ’ ಎಂದು ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಸ್ಪಷ್ಟಪಡಿಸಿದರು.
ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದಲ್ಲಿ ಮಾತನಾಡಿ, ‘ಜಾಧವ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹಾಗೂ ನನಗೆ ರಾಜೀನಾಮೆ ಪತ್ರದ ಜತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸಾಮ್ಯತೆಯಿಲ್ಲ. ಹೀಗಾಗಿ ಅವರಿಂದ ಸ್ಪಷ್ಟನೆ ಕೇಳಿದ್ದೇನೆ’ ಎಂದರು.
‘ಜಾಧವ ಅವರು ಸ್ಪಷ್ಟನೆಯೊಂದಿಗೆ ಪ್ರಮಾಣಪತ್ರ ಸಲ್ಲಿಸಿದ ನಂತರ ರಾಜೀನಾಮೆ ಅಂಗೀಕರಿಸುವ ಬಗ್ಗೆ ಪರಿಶೀಲನೆ ಮಾಡುತ್ತೇನೆ’ ಎಂದರು.
ಆಗ್ರಹ: ಜಾಧವ ಅವರ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮಾಜಿ ಸಚಿವ ವೈಜನಾಥ ಪಾಟೀಲ್ ಪತ್ರ ಬರೆದು ಆಗ್ರಹಿಸಿದ್ದಾರೆ.