ಬೆಂಗಳೂರು: ಯಾದಗಿರಿ ಜಿಲ್ಲೆ ಯಾದಗಿರಿ ಕ್ಷೇತ್ರದ ಮಾಜಿ ಶಾಸಕ ಎ.ಬಿ. ಮಾಲಕರಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.
ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿರುವ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಶುಕ್ರವಾರ ಆ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಅವಿಭಜಿತ ಕಲಬುರ್ಗಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಾಲಕರಡ್ಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಎಂದು ಕೋಪಗೊಂಡು ಪಕ್ಷ ತೊರೆಯಲು ನಿರ್ಧರಿಸಿದ್ದರು. ಪಕ್ಷದ ನಾಯಕರ ಮನವೊಲಿಕೆ ಬಳಿಕ ಅಲ್ಲಿಯೇ ಉಳಿದಿದ್ದರು.
ಯಡಿಯೂರಪ್ಪ ಅವರನ್ನು ಶುಕ್ರವಾರ ಭೇಟಿಯಾದ ರಡ್ಡಿ ಕೆಲಹೊತ್ತು ಚರ್ಚೆ ನಡೆಸಿದರು. ‘ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗಿದೆ. ಯಾವುದೇ ಷರತ್ತು ಒಡ್ಡಿಲ್ಲ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಬೇಕು ಎಂಬ ಒಂದೇ ಕಾರಣಕ್ಕೆ ಬಿಜೆಪಿ ಸೇರುತ್ತಿದ್ದೇನೆ’ ಎಂದು ಅವರಿಗೆ ತಿಳಿಸಿದ್ದಾಗಿ ಮೂಲಗಳು ಹೇಳಿವೆ.