ಬೆಂಗಳೂರು: ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ.
‘ನನ್ನ ವಿರುದ್ಧದ ಪ್ರಕರಣ ರದ್ದುಗೊಸಳಿಸಬೇಕು’ ಎಂದು ಕೋರಿ ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಭಾಕರ ಭಟ್ ಪರ ವಕೀಲ ಎಂ.ಅರುಣ್ ಶ್ಯಾಮ್, ‘ಆರೋಪಗಳು ಸಂಜ್ಞೇಯ ಅಪರಾಧದ ಸ್ವರೂಪ ಹೊಂದಿಲ್ಲ.
ಇದೊಂದು ರಾಜಕೀಯ ಪ್ರೇರಿತ ದೂರು ಮತ್ತು ಈ ದೂರು ದಾಖಲಿಸುವಲ್ಲಿನ ಕಾನೂನು ಪ್ರಕ್ರಿಯೆ ಸಮರ್ಪಕವಾಗಿಲ್ಲ. ಆದ್ದರಿಂದ ಈ ದೂರನ್ನು ರದ್ದುಗೊಳಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಎಫ್ಐಅರ್ ವಜಾಗೊಳಿಸಿದೆ.
ಪ್ರಚೋದನಾಕಾರಿ ಭಾಷಣದ ಕುರಿತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಆಗಿದ್ದ ಗಿರೀಶ್ ಶೆಟ್ಟಿಗಾರ್ ಬಜಪೆ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.