ಶಿರಸಿ: ರಾಜ್ಯ ಸರ್ಕಾರ ಕಾನೂನು ಪ್ರಕಾರವಾಗಿಯೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ನಿರ್ಧರಿಸಿದೆ. ಕೆಡಿಬಿ ವತಿಯಿಂದ ಭೂಮಿ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರದ ನಿರ್ಧಾರ ಸಮಂಜಸವಾಗಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಹೇಳಿದರು.
ಸೋಮವಾರ ರಾತ್ರಿ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಎಂಬ ವಿಷಯಕ್ಕೆ ಸಂಬಂಧಿಸಿ ಜಿಂದಾಲ್ ಮುಖ್ಯಸ್ಥರೊಂದಿಗೆ ಚರ್ಚಿಸಿ, ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದರು.
ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲ ಬಹುತೇಕ ಮನ್ನಾ ಆಗಿದೆ. ಖಾಸಗಿ ಬ್ಯಾಂಕ್ಗಳಲ್ಲಿ ಮಾಡಿರುವ ಸಾಲದ ಮೊತ್ತ ದೊಡ್ಡದಾಗಿರುವ ಕಾರಣ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತದೆ. ಬ್ಯಾಂಕ್ ಗಳಲ್ಲಿ ಸಾಲಗಳಿಗೆ ಬಡ್ಡಿ ಹಾಕಿದಲ್ಲಿ ಅದನ್ನೂ ಸಹ ಸರ್ಕಾರವೇ ಭರಣ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಒಂದು ವರ್ಷದಿಂದ ಬಿಜೆಪಿಯವರು ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರ ಭದ್ರವಾಗಿದ್ದು, ಐದು ವರ್ಷದ ಆಡಳಿತ ಪೂರ್ಣಗೊಳಿಸಲಿದೆ. ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಎಲ್ಲರ ಬೇಡಿಕೆ ಈಡೇರಿಸಲು ಸಾಧ್ಯವಾಗದು. ಈ ಕಾರಣಕ್ಕಾಗಿ ಸರ್ಕಾರ ಬೀಳುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಹಾಗೂ ಪದಾಧಿಕಾರಿಗಳು ಮೊದಲ ಬಾರಿಗೆ ಇಲ್ಲಿಗೆ ಭೇಟಿ ನೀಡಿದ ಸಚಿವರನ್ನು ಸ್ವಾಗತಿಸಿದರು. ಸ್ಥಳೀಯ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.