ಹಾಸನ: ‘ಜಿಲ್ಲೆಯೂ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಪರಿಹಾರಕ್ಕಾಗಿ ನೆರವು ಕೋರಲು ಸೆ.10ರಂದು ಸರ್ವಪಕ್ಷ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು’ ಎಂದು ಸಂಸದ ಎಚ್.ಡಿ.ದೇವೇಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೇಟಿಗೆ ಪ್ರಧಾನಿ ಸಮಯ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್, ಬಿಜೆಪಿ ನಾಯಕರೂ ಆಗಮಿಸುವರು. ಅತಿವೃಷ್ಟಿ ಹಾನಿಯ ಪ್ರಮಾಣವನ್ನು ಪ್ರಧಾನಿಗೆ ಮನವರಿಕೆ ಮಾಡಲಾಗುವುದು’ ಎಂದು ತಿಳಿಸಿದರು.
‘ಹಾಸನ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಸಾರ್ವಜನಿಕ ಆಸ್ತಿ ಜೊತೆಗೆ ಕಾಫಿ, ಏಲಕ್ಕಿ, ಮೆಣಸು ಸೇರಿ ಕೋಟ್ಯಾಂತರ ರೂಪಾಯಿ ಮೌಲ್ಯದ ವಾಣಿಜ್ಯ ಬೆಳೆ ನಷ್ಟವಾಗಿದೆ. ಇದಕ್ಕೆ ಪರಿಹಾರ ಕಲ್ಪಿಸಲು ನೆರವು ಕೋರಲಾಗುವುದು’ ಎಂದರು.