ಬೆಂಗಳೂರು: ‘2014ರಲ್ಲಿ 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿರುವ 61 ಎಪಿಪಿಗಳ ವಿರುದ್ಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರಿಸಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಮತ್ತು ಸುಧಾ ಕಟ್ವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್. ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ, ‘ಈ ಹಗರಣದಲ್ಲಿ 61 ಅಭ್ಯರ್ಥಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇವರ ವಿರುದ್ಧ ಉತ್ತರ ಪತ್ರಿಕೆ ಬದಲಾಯಿಸಿದ ಮತ್ತು ನ್ಯಾಯಾಧೀಶರ ಸಹಿಗಳನ್ನು ತಿದ್ದಿದ ಆರೋಪಗಳಿವೆ. ಇಂತಹ ಕಳಂಕಿತರನ್ನು ನ್ಯಾಯಾಂಗ ಅಧಿಕಾರಿಗಳಾಗಿ ಮುಂದುವರಿಸಲಾಗುತ್ತಿದೆ’ ಎಂದು ಆಕ್ಷೇಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಾಸಿಕ್ಯೂಟರ್ಗಳು ನ್ಯಾಯಾಂಗ ಅಧಿಕಾರಿಗಳಲ್ಲ’ ಎಂದು ಸ್ಪಷ್ಟಪಡಿಸಿತು. ಅಂತೆಯೇ, ಸರ್ಕಾರದ ಪರ ವಕೀಲರಿಗೆ ಈ ಕುರಿತಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ತಿಳಿಸಿ ಎಂದು ಇದೇ 31ಕ್ಕೆ ಮುಂದೂಡಿದೆ.