ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನಬೇಡಿ: ಬಿ.ಎಸ್‌.ಯಡಿಯೂರಪ್ಪ ಮನವಿ

ಪಕ್ಷದ ಮುಖಂಡರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮನವಿ
Last Updated 5 ಮೇ 2019, 19:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಮ್ಮಿಶ್ರ ಸರ್ಕಾರ ಬೀಳಲಿದೆ, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಎಲ್ಲೂ ಹೇಳಬೇಡಿ. ದಯಮಾಡಿ ಈ ಬಗ್ಗೆ ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಮ್ಮ ಪಕ್ಷದ ಮುಖಂಡರಿಗೆ ಮನವಿ ಮಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರ ಇರಲ್ಲ ಎಂದು ನಾನು ಎಲ್ಲಿಯೂ ಮಾತನಾಡಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ’ನಾನು ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸೇ ಕಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ತೆಗೆದುಕೊಳ್ಳುವ ತೀರ್ಮಾನದ ಆಧಾರದ ಮೇಲೆ ಮುಂದಿನ ಬಗ್ಗೆ ಯೋಚಿಸೋಣ’ ಎಂದು ಹೇಳಿದರು.

’ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಗಿಲ್ಲ. ಅವರ ವಿರುದ್ಧ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌, ಜೆಡಿಎಸ್‌ ಮುಖಂಡರ ಕಚ್ಚಾಟ ಉಲ್ಬಣವಾಗಲಿದ್ದು, ರಾಜ್ಯ ರಾಜಕೀಯದ ಮೇಲೆ ಇದರ ಪರಿಣಾಮ ಆಗಬಹುದು’ ಎಂದು ಸೂಕ್ಷ್ಮವಾಗಿ ಹೇಳಿದರು.

’ರೈತರಿಗೆ ಸಾಲಮನ್ನಾ ಋಣಮುಕ್ತ ಪತ್ರ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಇದೀಗ ಸಾಂತ್ವನ ಪತ್ರ ನೀಡುತ್ತೇನೆ ಎಂದಿರುವುದು ನಗೆಪಾಟಲಿನ ವಿಷಯ. ಈ ಮೂಲಕ ರೈತ ಸಮುದಾಯಕ್ಕೆ ಅವರು ನಂಬಿಕೆ ದ್ರೋಹ ಮಾಡಿದ್ದಾರೆ’ ಎಂದು ಆರೋಪಿಸಿದರು.

ವರಿಷ್ಠರಿಗೆ ಬಿಟ್ಟ ವಿಷಯ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ’ಒಬ್ಬ ವ್ಯಕ್ತಿ ಎರಡು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ರಾಷ್ಟ್ರ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಇದು ಅವರಿಗೆ ಬಿಟ್ಟ ವಿಚಾರ’ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ವಿಲನ್‌: ಈಶ್ವರಪ್ಪ

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ವಿಲನ್‌ ಆಗಿದ್ದಾರೆ. ಫಲಿತಾಂಶ ಬಂದ ಬಳಿಕ ಕಾಂಗ್ರೆಸ್‌ ಚಿಂದಿ ಚಿತ್ರಾನ್ನ ಆಗಲಿದೆ. ಆ ಪಕ್ಷವನ್ನು ರಾಜ್ಯದಲ್ಲಿ ಹುಡುಕಬೇಕಾಗುವ ಸ್ಥಿತಿ ಬರಲಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಣೆಬರಹ ಗೊತ್ತಿರದ ಬಾದಾಮಿ ಕ್ಷೇತ್ರದ ಜನರು ಅವರನ್ನು ಶಾಸಕರನ್ನಾಗಿ ಮಾಡಿದರು. ಆದರೆ, ಇವರ ಹಣೆಬರಹ ತಿಳಿದಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜನ ಸೋಲಿಸಿದರು ಎಂದು ಗೇಲಿ ಮಾಡಿದರು.

ಸಿದ್ದರಾಮಯ್ಯ ಒಬ್ಬ ಸ್ವಯಂ ಘೋಷಿತ ಮುಖ್ಯಮಂತ್ರಿ ಆಗಿದ್ದಾರೆ. ಈ ಹಿಂದೆ ಲಿಂಗಾಯತ–ವೀರಶೈವರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಈ ಚುನಾವಣೆ ಬಳಿಕ ಅವರ ರಾಜಕೀಯ ಮುಗಿಯಿತು ಎಂದು ಹರಿಹಾಯ್ದರು.

ಪ್ರಕರಣ ಹಿಂಪಡೆಯಲು ಆಗ್ರಹ:

ಬಿಜೆಪಿ ಕಾರ್ಯಕರ್ತರ ವಿರುದ್ಧ ಹಾಕಿರುವ ಸುಳ್ಳು ಕೇಸುಗಳನ್ನು ತಕ್ಷಣ ಹಿಂಪಡೆಯಬೇಕು. ಗೃಹ ಸಚಿವ ಎಂ.ಬಿ.ಪಾಟೀಲ ಅವರ ಸರ್ವಾಧಿಕಾರಿ ಧೋರಣೆ ಖಂಡಿಸಿ ಮೇ 6ರಂದು ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ಜಗದೀಶ ಶೆಟ್ಟರ್‌ ತಿಳಿಸಿದರು.

ಪ್ರಧಾನಿ ಮೋದಿ ವಿರುದ್ಧ ಬಾಯಿಗೆ ಬಂದಂತೆ ಏಕ ವಚನದಲ್ಲಿ ಮಾತನಾಡುವ ಸಿದ್ದರಾಮಯ್ಯ, ಜಮೀರ್‌ ಅಹ್ಮದ್‌ ಅವರನ್ನು ಜೈಲಿಗೆ ಕಳುಹಿಸಬೇಕು ಎಂದರು.

ಮಹದಾಯಿ ಪ್ರಶ್ನೆಗೆ ಬಿಜೆಪಿ ಶಾಸಕರ ಸಿಡಿಮಿಡಿ

ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಬಿಜೆಪಿ ನಾಯಕರು ಏಕೆ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಪತ್ರಕರ್ತರು ಪ್ರಶ್ನಿಸುತ್ತಿದ್ದಂತೆ ಸಿಡಿಮಿಡಿಗೊಂಡ ಬಿಜೆಪಿ ಶಾಸಕರು, ‘ಈ ಪ್ರಶ್ನೆಯನ್ನು ನಮಗಲ್ಲ, ಕಾಂಗ್ರೆಸ್‌ಗೆ, ಸಿದ್ದರಾಮಯ್ಯಗೆ ಕೇಳಿ’ ಎಂದು ರೇಗಾಡಿದರು.

’ಅವರಿಗೆ ಕೇಳಿದ್ದೇವೆ, ನಿಮಗೂ ಕೇಳುತ್ತಿದ್ದೇವೆ. ಯೋಜನೆ ಅನುಷ್ಠಾನಕ್ಕೆ ನಿಮ್ಮ ಬದ್ಧತೆ ಏನು ತಿಳಿಸಿ’ ಎಂದಾಗ, ಶಾಸಕರಾದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ, ’ಈ ವಿಷಯದಲ್ಲಿ ಬಿಜೆಪಿ ವಿರುದ್ಧ ಆರೋಪ ಮಾಡಬೇಡಿ, ಯೋಜನೆ ಜಾರಿಯಾಗಬೇಕು ಎಂಬ ವಿಷಯದಲ್ಲಿ ನಮಗೂ ಬದ್ಧತೆ ಇದೆ. ಅದು ಆಗುವವರೆಗೂ ನಾವೂ ಹೋರಾಟ ನಡೆಸುತ್ತೇವೆ. ಮಹದಾಯಿಗೆ ಗೋಡೆ ಕಟ್ಟಿದ ಕಾಂಗ್ರೆಸ್‌ ಮುಖಂಡರನ್ನು ಪ್ರಶ್ನಿಸಿ’ ಎಂದು ಏರುಧ್ವನಿಯಲ್ಲಿ ಪ್ರತಿಕ್ರಿಯಿಸಿದರು.

ಮಹದಾಯಿ ವಿಷಯವಾಗಿ ಮೇಲಿಂದ ಮೇಲೆ ಪ್ರಶ್ನೆಗಳು ಎದುರಾಗುತ್ತಿದ್ದಂತೆ ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ, ಜಗದೀಶ ಶೆಟ್ಟರ್‌, ಶ್ರೀರಾಮುಲು, ಗೋವಿಂದ ಕಾರಜೋಳ ಅವರು ಉತ್ತರ ನೀಡದೇ ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿ, ಹೊರನಡೆದರು.

*ಮೇ 23ರ ಚುನಾವಣೆ ಫಲಿತಾಂಶದ ಬಳಿಕ ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ

–ಗೋವಿಂದ ಕಾರಜೋಳ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT