ಬೆಳಗಾವಿ: ಹೊಸದಾಗಿ ಇನ್ಯಾರನ್ನೂ ಉಪ ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಈ ಮೂಲಕ ಆ ಹುದ್ದೆಯ ಕನಸು ಕಾಣುತ್ತಿರುವ ರಮೇಶ ಜಾರಕಿಹೊಳಿ, ಬಿ. ಶ್ರೀರಾಮುಲು ಮೊದಲಾದವರಿಗೆ ತಣ್ಣೀರೆರಚಿದರು.
ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇರುವ ಮೂವರೂ ಡಿಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಈಗಾಗಲೇ ತಡವಾಗಿದೆ. ಇದರ ಬಗ್ಗೆ ಚರ್ಚಿಸಲು ಗುರುವಾರ (ಜ.30) ನವದೆಹಲಿಗೆ ಹೋಗುತ್ತೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದೇವೆ. ಅವರು ಸೂಚಿಸಿದರೆ ಒಂದಿಬ್ಬರನ್ನು ಸಂಪುಟದಿಂದ ಕೈಬಿಡಬೇಕಾಗುತ್ತದೆ. 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಎಲ್ಲ ಗೊಂದಲಗಳಿಗೂ ಉತ್ತರ ದೊರೆಯಲಿದೆ ಎಂದರು.
ದೆಹಲಿಗೆ ಹೋದಾಗ ಮಹದಾಯಿ ಸೇರಿದಂತೆ ಅಂತರರಾಜ್ಯ ವಿವಾದಗಳ ಬಗ್ಗೆಯೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದರು.
ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ ಹಾಗೂ ಎರಡು ತಿಂಗಳಿಗೊಮ್ಮೆ ಇಲ್ಲಿ ಸಚಿವ ಸಂಪುಟ ಸಭೆ ನಡೆಸಲು ಕ್ರಮ ಕೈಗೊಳ್ಳುವೆ ಎಂದರು.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.