ಮಂಗಳೂರು: ಗೋ ಕಳ್ಳತನ, ಅಕ್ರಮ ಗೋ ಸಾಗಣೆಯನ್ನು ನಿಯಂತ್ರಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಕಡಬ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಉಡುಪಿ, ಕಾಪು ತಾಲ್ಲೂಕುಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪ್ರತಿಭಟನೆ ನಡೆಸಲಾಯಿತು.
ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಜರಂಗದಳದ ಪ್ರಾಂತ ಸಹ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ‘ಗೋವುಗಳ ವಿಚಾರದಲ್ಲಿ ಹಿಂದೂಗಳ ಸಹನೆಯ ಕಟ್ಟೆ ಒಡೆಯಲು ಅವಕಾಶ ನೀಡಬೇಡಿ. ನೀವಾಗಿಯೇ ಗೋ ರಕ್ಷಣೆ ಕೆಲಸವನ್ನು ಮಾಡದಿದ್ದರೆ ಪರಿಣಾಮ ನೆಟ್ಟಗಿರದು. ನಾವು ಪ್ರಾಣ ತ್ಯಾಗ ಮಾಡಿಯಾದರೂ ಗೋವುಗಳಿಗೆ ರಕ್ಷಣೆ ನೀಡುತ್ತೇವೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.