ಬೆಳಗಾವಿ: ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿ ಹೊಸ ಬದುಕು ರೂಪಿಸಿಕೊಳ್ಳಲು ಹೆಣಗಾಡುತ್ತಿರುವ ರಾಮದುರ್ಗ ತಾಲ್ಲೂಕಿನ ಹಿರೇಹಂಪಿಹೊಳಿ ಗ್ರಾಮದಲ್ಲಿ ನಿವಾಸಿಗಳಿಗೆ, ಖಾಸಗಿ ಬ್ಯಾಂಕ್ಗಳು ಹಾಗೂ ಫೈನಾನ್ಸ್ನವರು ಸಾಲ ಮರು ಪಾವತಿಸುವಂತೆ ಎಚ್ಚರಿಕೆಯ ನೋಟಿಸ್ಗಳನ್ನು ಕಳುಹಿಸುತ್ತಿರುವುದು ಬರಸಿಡಿಲು ಬಡಿದಂತಾಗಿದೆ.
ಮಹಿಳೆಯರು ಸ್ವಸಹಾಯ ಸಂಘಗಳಿಂದ, ಪುರುಷರು ವಿವಿಧ ಪೈನಾನ್ಸ್ನಲ್ಲಿ ಸಾಲ ಮಾಡಿ ಕೃಷಿ ಮತ್ತು ಹೈನುಗಾರಿಕೆಗೆ ಬಳಸಿಕೊಂಡಿದ್ದರು. ಹಲವು ವರ್ಷಗಳಿಂದ ಸಾಲ ಪಾವತಿಸಿದ್ದಾರೆ. ಆದರೆ, 4 ತಿಂಗಳ ಹಿಂದೆ ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಕ್ಕು ಈ ಗ್ರಾಮದ ಜನರ ಬದುಕು ಬೀದಿಗೆ ಬಂದಿದೆ. ಬರೋಬ್ಬರಿ 3 ಬಾರಿ ಬಂದೆರಗಿದ ಭಾರಿ ಪ್ರವಾಹದಿಂದ ಇಡೀ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಎರಡು ತಿಂಗಳುಗಳಿಗಿಂತಲೂ ಹೆಚ್ಚು ಸಮಯ ಅಲ್ಲಿನ ಜನರು ಸುರೇಬಾನದ ಕಾಳಜಿ ಕೇಂದ್ರದಲ್ಲಿ ವಾಸವಿದ್ದರು. ಬಳಿಕ ಗ್ರಾಮಕ್ಕೆ ವಾಪಸ್ ಬಂದಿದ್ದಾರೆ. ಮನೆಗಳನ್ನು ದುರಸ್ತಿ ಮಾಡಿಕೊಂಡು, ಬದುಕು ಕಟ್ಟಿಕೊಳ್ಳಲು ಪರದಾಡುತ್ತಿರುವ ಅವರಿಗೆ, ಖಾಸಗಿ ಬ್ಯಾಂಕ್ಗಳು ಹಾಗೂ ಫೈನಾನ್ಸ್ ಕಂಪನಿಗಳವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
‘ಸಾಲ ಪಾವತಿಸದಿದ್ದಲ್ಲಿ ಮನೆಗೆ ಬೀಗ ಹಾಕಿ ಜಪ್ತಿ ಮಾಡಬೇಕಾಗುತ್ತದೆ ಎಂದು ಜಮೀನುಗಳ ಬಳಿಗೂ ಬಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡಿದ್ದಾರೆ.
‘ಗ್ರಾಮದಲ್ಲಿ 134 ಮನೆಗಳು ಬಿದ್ದಿವೆ. ಈವರೆಗೆ, 34 ಮನೆಗಳಿಗೆ ಮಾತ್ರವೇ ಪರಿಹಾರದ ಹಣ ಬಿಡುಗಡೆಯಾಗಿದೆ. ಬೆಳೆ ಪರಿಹಾರ ಸೇರಿ ಇತರ ಯಾವುದೇ ಪರಿಹಾರ ಬಂದಿಲ್ಲ. ಎಷ್ಟೇ ಜಮೀನು ಇದ್ದರೂ ಬೇರೆ ಊರಿಗೆ ಕೂಲಿಗೆ ಹೋಗುವ ಸ್ಥಿತಿ ಬಂದಿದೆ. ಹೀಗಿರುವಾಗ, ಬ್ಯಾಂಕ್ ನೋಟಿಸ್ಗಳು ಬರುತ್ತಿವೆ. ಕೆಲವು ಬ್ಯಾಂಕ್ನವರು ವಕೀಲರ ಮೂಲಕ ಲೀಗಲ್ ನೋಟಿಸ್ ಕೂಡ ಕಳುಹಿಸುತ್ತಿವೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಗ್ಗೆ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ತಿಳಿಸಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ‘ಸಂತ್ರಸ್ತರು ನಿರ್ದಿಷ್ಟ ದೂರುಗಳಿದ್ದರೆ ಸಲ್ಲಿಸಿದರೆ ಪರಿಶೀಲಿಸಲಾಗುವುದು. ಸಂತ್ರಸ್ತರಾಗಿರುವವರಿಂದ ಸಾಲ ವಸೂಲಿ ಮುಂದೂಡುವಂತೆ ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.