ಬೆಂಗಳೂರು: ‘ವಿಮಾನ, ರೈಲು ನಿಲ್ದಾಣ ಹಾಗೂ ಹೆಚ್ಚು ಜನಸಂದಣಿ ಸೇರುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
‘ಭಯೋತ್ಪಾದಕರ ನುಸುಳುವಿಕೆ ಬಗ್ಗೆ ಕಣ್ಗಾವಲು ಇಡುವಂತೆ ಈ ಹಿಂದೆ ನೀಡಿದ್ದ ಎಚ್ಚರಿಕೆಯನ್ನು ಮತ್ತೊಮ್ಮೆ ನೆನಪಿಸಲಾಗಿದೆ. ಹಾಗಂತ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿಲ್ಲ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
‘ಹಿಂದೆ ನೀಡಿದ್ದ ಎಚ್ಚರಿಕೆಯನ್ನು ಅಧಿಕಾರಿಗಳು ಪಾಲಿಸಿದ್ದರಿಂದಾಗಿ ಹುಬ್ಬಳ್ಳಿಯಲ್ಲಿ ಸ್ಫೋಟಕ ಪತ್ತೆಯಾಗಿದೆ. ದೊಡ್ಡ ಪ್ರಮಾಣದ ಅನಾಹುತವಾಗುವುದು ತಪ್ಪಿದೆ. ಸಂಶಯಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಅವರು ವಿವರಿಸಿದರು.
‘ಹುಬ್ಬಳ್ಳಿ ಘಟನೆ ಬಗ್ಗೆ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ಉನ್ನತಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.