ಬೆಂಗಳೂರು:"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಆಟೊ ರಿಕ್ಷಾ ಚಾಲಕರ ಕಲ್ಯಾಣಕ್ಕಾಗಿ ಮಂಡಿಸಿರುವ ವಿವಿಧ ಕೋರಿಕೆಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಕಾಲಾವಕಾಶಕ್ಕೆ ಮನವಿ ಮಾಡಿದೆ.
ಈ ಕುರಿತಂತೆ ಬೆಂಗಳೂರು ಆಟೋ ಚಾಲಕರ ಸೌಹಾರ್ದ ಸಹಕಾರ ಲಿಮಿಟೆಡ್ ಮತ್ತು ಸೋಮಶೇಖರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಪುತ್ತಿಗೆ ಆರ್.ರಮೇಶ್ ವಾದ ಮಂಡಿಸಿ, "ಆಟೋ ರಿಕ್ಷಾ ಚಾಲಕರು ಸಾರ್ವಜನಿಕ ಸೇವೆಯಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಹಗಲು ರಾತ್ರಿ ಕಷ್ಟಪಟ್ಟು ದುಡಿದರೂ ಕನಿಷ್ಠ ಆದಾಯ ಇದ್ದು, ಇವರ ಕುಟುಂಬಗಳು ಸಂಕಷ್ಟದಲ್ಲಿವೆ" ಎಂದರು.
"ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಟೋ ರಿಕ್ಷಾ ಚಾಲಕರಿಗೆ ಆರೋಗ್ಯ, ಹಾಗೂ ಬಿಡಿಎ ನಿವೇಶನ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು" ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲ ಶಿವಪ್ರಭು ಹಿರೇಮಠ ಅವರು, "ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಬೇಕು" ಎಂದು ಕೋರಿದರು.
ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.