ಅಥಣಿ ಮತ್ತು ಕಾಗವಾಡದಲ್ಲಿ ಪ್ರಚಾರ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ರಮವಾಗಿ ಮಹೇಶ ಕುಮಠಳ್ಳಿ ಹಾಗೂ ಶ್ರೀಮಂತ ಪಾಟೀಲ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಭಾವಿ ಸಚಿವರೇ ಎಂದೇ ಕರೆದಿದ್ದರು. ಉಪ ಮುಖ್ಯಮಂತ್ರಿ ಸವದಿ ಕೂಡ ಇದನ್ನೇ ಮುಂದಿಟ್ಟು ಮತ ಕೇಳಿದ್ದರು. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡರೆ ಈ ಮೂವರಿಗೂ ಸಚಿವ ಸ್ಥಾನ ಸಿಗಬಹುದಾಗಿದೆ. ಅಲ್ಲದೇ, ಹುಕ್ಕೇರಿಯ ಶಾಸಕ ಉಮೇಶ ಕತ್ತಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ‘ಕತ್ತಿಗೆ ಕೊಡದಿದ್ದರೆ ಬಿಡುತ್ತಾರೆಯೇ?’ ಎಂದು ಖುದ್ದು ಯಡಿಯೂರಪ್ಪ ಅವರೇ ಪ್ರತಿಕ್ರಿಯಿಸಿದ್ದರು. ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿರುವುದರಿಂದಾಗಿ, ಜಿಲ್ಲೆಯ ಇನ್ಯಾರು ಸಂಪುಟ ಸೇರಬಹುದು ಎನ್ನುವ ಚರ್ಚೆಗಳು ಆರಂಭವಾಗಿವೆ.